ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.29 ರ ನಂತರ ಕಾಂಗ್ರೆಸ್‌ ಪಟ್ಟಿ ಬಿಡುಗಡೆ

ಹಾಸನದಲ್ಲಿ ಜ. 21 ರಂದು ಪ್ರಜಾಧ್ವನಿ ಯಾತ್ರೆ: ಸಂಸದ ಡಿ.ಕೆ ಸುರೇಶ್
Last Updated 17 ಜನವರಿ 2023, 16:16 IST
ಅಕ್ಷರ ಗಾತ್ರ

ಹಾಸನ: ಕಾಂಗ್ರೆಸ್ ಪಕ್ಷ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ್ದು, ಸ್ಥಳೀಯ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದೆ. ಜ. 29ಕ್ಕೆ ಪ್ರಜಾಧ್ವನಿ ಯಾತ್ರೆ ಮುಗಿಯಲಿದ್ದು, ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಂಸದ, ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಡಿ.ಕೆ. ಸುರೇಶ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಜಿ ಹಾಕದಿದ್ದರೂ ಕಾಂಗ್ರೆಸ್ ಟಿಕೆಟ್ ನೀಡುವ ವಿಷಯವಾಗಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಜಿಲ್ಲೆಯ ಬೇರೆ ಪಕ್ಷದ ನಾಯಕರು ಹಾಗೂ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಿರೀಕ್ಷೆ ಇದೆ ಎಂದು ಎಂದರು.

ಹಾಸನ ಜಿಲ್ಲೆಯ ಏಳಕ್ಕೆ ಏಳೂ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಕಾಂಗ್ರೆಸ್ ಎಲ್ಲ ಕ್ಷೇತ್ರದಲ್ಲಿ ಗೆಲುವು ಪಡೆಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಾತ್ರೆ ಯಶಸ್ವಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳ ದುರಾಡಳಿತದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆ ಹಾಸನದಲ್ಲೂ ಯಶಸ್ವಿಯಾಗಲಿದೆ ಎಂದು ಹೇಳಿದರು.

ಯಾತ್ರೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಚರಿಸಿದ್ದು, ಮಂಗಳವಾರ ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಯಶಸ್ವಿಯಾಗಿದೆ. ಜ.21 ರಂದು ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಶಾಸಕ ಆರ್‌.ವಿ. ದೇಶಪಾಂಡೆ, ರೆಹಮಾನ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದರು.

ಭ್ರಷ್ಟ ಸರ್ಕಾರ: ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಪಾಪದ ಕೂಟವಾಗಿದೆ. ಸ್ಯಾಂಟ್ರೋ, ಶೇ 40 ಕಮಿಷನ್‌, ಸೇರಿದಂತೆ ಭ್ರಷ್ಟಾಚಾರವೇ ಬಿಜೆಪಿ ಸರ್ಕಾರದಲ್ಲಿ ತುಂಬಿ ಹೋಗಿದೆ. ಈ ಎಲ್ಲ ಬೆಳವಣಿಗೆ ಕಂಡಿರುವ ಜನರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸುರೇಶ್ ತಿಳಿಸಿದರು.

ಮಾಜಿ ಸಚಿವ ಎಚ್.ಎಂ. ರೇವಣ್ಣ ಮಾತನಾಡಿ, ‘ನಾ ನಾಯಕಿ’ ಕಾರ್ಯಕ್ರಮದಿಂದ ಬಿಜೆಪಿ ನಾಯಕರಲ್ಲಿ ನಡುಕ ಆರಂಭವಾಗಿದೆ. ಇಷ್ಟು ಪ್ರಮಾಣದ ಜನರೊಂದಿಗೆ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿದೆ. ಹಾಸನದಲ್ಲಿ ಲಕ್ಷಕ್ಕೂ ಮೀರಿ ಜನರು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಮಾಜಿ ಶಾಸಕರಾದ ಸಿ.ಎಸ್. ಪುಟ್ಟೇಗೌಡ, ಎಂ.ಎ. ಗೋಪಾಲಸ್ವಾಮಿ, ಮಾಧ್ಯಮ ವಕ್ತಾರ ದೇವರಾಜೇಗೌಡ, ಮುಖಂಡರಾದ ಬಿ.ಕೆ. ರಂಗಸ್ವಾಮಿ, ಶಂಕರ್, ಬನವಾಸೆ ರಂಗಸ್ವಾಮಿ ಇದ್ದರು.

‘ಜನಪರ ಯೋಜನೆ ಜಾರಿ’

ಕಾಂಗ್ರೆಸ್ ಪಕ್ಷ ಈಗಾಗಲೇ ಜನಪರ ಆಡಳಿತ ನೀಡುವ ಉದ್ದೇಶದಿಂದ ಉತ್ತಮ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ಮಾಸಿಕ ₹ 2 ಸಾವಿರ ಸಹಾಯಧನದ ಗೃಹಲಕ್ಷ್ಮಿ ಯೋಜನೆಯನ್ನು ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಘೋಷಣೆ ಮಾಡಿದ್ದಾರೆ ಎಂದು ಡಿ.ಕೆ. ಸುರೇಶ್‌ ತಿಳಿಸಿದರು.

ಬೆಲೆ ಏರಿಕೆಯಿಂದ ನಲುಗಿರುವ ಗೃಹಿಣಿಯರ ಅನುಕೂಲಕ್ಕಾಗಿ ಪ್ರತಿ ಸಿಲಿಂಡರ್‌ಗೆ ₹ 500 ಸಹಾಯಧನವನ್ನು ಘೋಷಣೆ ಮಾಡಿದ್ದು, ಜಿಎಸ್ಟಿ ಹೇರಿಕೆಯಿಂದ ಜನರನ್ನು ಪಾರು ಮಾಡುವ ನಿಟ್ಟಿನಲ್ಲಿ ನಿತ್ಯದ ಬಳಕೆಯ ವಸ್ತುಗಳಿಗೆ ಜಿಎಸ್ಟಿ ಸಹಾಯಧನ ಸೇರಿದಂತೆ ಹಲವು ಉತ್ತಮ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ಸಿಲಿಂಡರ್ ಬೆಲೆ ಏರಿಕೆಯಾದರೆ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಈಗ ಸಿಲಿಂಡರ್‌ ಬೆಲೆಯನ್ನು ₹ 1,100ಕ್ಕೆ ಏರಿಸುವ ಮೂಲಕ ಜನರ ಹಣ ಸುಲಿಗೆ ಮಾಡುತ್ತಿದೆ. ಜನಪರ ಪ್ರಣಾಳಿಕೆ ನೀಡುವ ಮೂಲಕ ಜನರ ಹಿತ ಕಾಯುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.

‘ಮಹಿಳೆಯರಿಗೆ ಗೌರವ ಕೊಡಲ್ಲ’

‘ನಾ ನಾಯಕಿ ಅಲ್ಲ, ನಾ ನಾಲಾಯಕಿ’ ಎಂಬ ಸಚಿವ ಡಾ.ಅಶ್ವತ್ಥ ನಾರಾಯಣ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ. ಸುರೇಶ್, ‘ಆತನ ಹೆಸರು ಹೇಳಲು ಸಹ ನಾ ಇಷ್ಟಪಡುವುದಿಲ್ಲ. ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ಎಂದಿಗೂ ಮಹಿಳೆಯರಿಗೆ ಗೌರವ ಕೊಡುವುದನ್ನು ಕಲಿತಿಲ್ಲ. ದೇಶದಲ್ಲಿ ಮಹಿಳೆಯರು ರಕ್ಷಣೆ ಮಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕೇವಲ ಭಾವನಾತ್ಮಕ ಹೇಳಿಕೆಗಳನ್ನು ನೀಡುತ್ತಿದೆ’ ಎಂದು ಟೀಕಿಸಿದರು.

ಧ್ರುವನಾರಾಯಣ್ ಅವರು ಎ.ಮಂಜು ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸುರೇಶ್‌, ‘ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕ್ಷೇತ್ರದ ನಾಯಕರು ಹಾಗೂ ಮುಖಂಡರೊಂದಿಗೆ ಮಾತುಕತೆ ನಡೆಸಿ, ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT