ಹಾಸನ: ‘ಮಲೇರಿಯ, ಡೆಂಗಿ, ಇನ್ನಿತರ ಕಾಯಿಲೆಗಳು ಹರಡದಂತೆ ಸೋಂಕು ನಿವಾರಣಾ ಸಿಂಪಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಹಾಗೂ ಜಲಜೀವನ್ ಮಿಷನ್ ಸಂಬಂಧಿಸಿದ ಕೆಲಸಗಳನ್ನು ಶೀಘ್ರವಾಗಿ ಪ್ರಾರಂಭಿಸುವಂತೆ’ ಹೇಳಿದರು.
‘ಪ್ರತಿಯೊಬ್ಬರಿಗೂ ಲಸಿಕೆ ನೀಡುವುದರ ಜತೆಗೆ ಎಲ್ಲಾ ಪ್ರಾಥಮಿಕ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಇರುವಂತೆ ನೋಡಿಕೊಳ್ಳಬೇಕು. ಶಾಲಾ ಎಲ್ಲಾ ಮಕ್ಕಳಿಗೆ ತರಕಾರಿ, ಕಾಳು, ಪ್ರೋಟಿನ್ ಅಂಶವಿರುವ ಪೌಷ್ಟಿಕ ಆಹಾರ ನೀಡಬೇಕು’ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ವಾರ್ಷಿಕ ಕ್ರಿಯಾ ಯೋಜನೆಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಉತ್ತಮ ಪ್ರಗತಿ ಸಾಧಿಸುವಂತೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಮೇ 31ರಂದು ನಿವೃತ್ತಿ ಹೊಂದಲಿರುವ ಜಿಲ್ಲಾ ಪಂಚಾಯಿತಿಮುಖ್ಯ ಯೋಜನಾಧಿಕಾರಿ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಪುನೀತ್ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಲ್. ಯಶವಂತ್, ಸಹಾಯಕ ನಿರ್ದೇಶಕರಾದ ದಿನೇಶ್, ನಟರಾಜ್ ಹಾಜರಿದ್ದರು.