ಹಾಸನ: ಕೋವಿಡ್ ಪೀಡಿತರಲ್ಲಿ ಸೋಮವಾರ ಮತ್ತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 269 ತಲುಪಿದೆ.
ಮತ್ತೊಂದೆಡೆ 296 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಮೂಲಕ ಗುಣಮುಖರ ಸಂಖ್ಯೆ 10823 ತಲುಪಿದೆ. 259 ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 13,742ಕ್ಕೆ ಏರಿದೆ.
ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಅರಸೀಕೆರೆ 65 ವರ್ಷದ ಮಹಿಳೆ, ಚಿಕ್ಕಮಗಳೂರಿನ 42 ವರ್ಷದ ಪುರುಷ ಹಾಗೂ ಚನ್ನರಾಯಪಟ್ಟಣದ ಇಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಕೋವಿಡ್ ನಿಯಮ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2650ಕ್ಕೆ ಇಳಿದಿದೆ. ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳು ಮತ್ತು ಮನೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವ ರೋಗಿಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಅರಸೀಕೆರೆ 25, ಚನ್ನರಾಯಪಟ್ಟಣ 76, ಆಲೂರು 16, ಹಾಸನ 66, ಹೊಳೆನರಸೀಪುರ 31, ಅರಕಲಗೂಡು 18, ಬೇಲೂರು 14, ಸಕಲೇಶಪುರ 11 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಪರಸ್ಪರ ಅಂತರ ಪಾಲನೆ ಜತೆಗೆ ಮಾಸ್ಕ್ ಧರಿಸಿ ಓಡಾಡಬೇಕು. ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದು ಕಡಿಮೆ ಮಾಡಬೇಕು. ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.