ಹಾಸನ: ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಆಯೋಗದ ವರದಿಯಂತೆ ಮೀಸಲಾತಿ ಜಾರಿಯಲ್ಲಿ ಸರ್ಕಾರದ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಡಳಿತ ಭವನದವರೆಗೆಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಆರ್.ಗಿರೀಶ್ ಮನವಿ ಸಲ್ಲಿಸಿದರು.
ಆಯೋಗದ ವರದಿ ಜಾರಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡು ನೂರು ದಿನ ಕಳೆದರೂ ಸರ್ಕಾರ ಗಮನ ಹರಿಸಿಲ್ಲ. ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ಬಿ.ಎಸ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎನ್.ಟಿ.ಶ್ರೀನಿವಾಸ್, ಜಿ.ಒ.ಮಹಾಂತಪ್ಪ, ಲಿಂಗರಾಜು ಕೊಂಡಿಹಳ್ಳಿ, ಮಂಜನಾಯಕ, ಬಿ.ಎನ್.ಮೂರ್ತಿ, ಜಯಕುಮಾರ್, ಸಂದೇಶ್, ಕೃಷ್ಣದಾಸ್, ಸತೀಶ್, ಧರ್ಮೇಶ್, ಎಂ.ಜಿ.ಪೃಥ್ವಿ, ನವೀನ್ ಕುಮಾರ್ ಇದ್ದರು.