ಚನ್ನರಾಯಪಟ್ಟಣ: ‘ಮದ್ಯಪಾನದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರವು ಮದ್ಯ ಮಾರಾಟವನ್ನು ನಿಷೇಧಿಸಬೇಕು’ ಎಂದುಶಾಸಕ ಸಿ.ಎನ್. ಬಾಲಕೃಷ್ಣ ಆಗ್ರಹಿಸಿದರು.
ಸರ್ಕಾರಿ ಆಸ್ಪತ್ರೆ, ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ, ಲಯನ್ಸ್ ಕ್ಲಬ್, ಪುಣ್ಯ ಆಸ್ಪತ್ರೆ ಸಹಯೋಗದಲ್ಲಿ ಬುಧವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಮದ್ಯಪಾನದ ದುಷ್ಪರಿಣಾಮ ಹಾಗೂ ಪರಿಹಾರ ಕುರಿತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಯುವ ಸಮುದಾಯ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.
ವೈದ್ಯ ಜೆ.ಎನ್. ರಘು ಮಾತನಾಡಿ, ‘ಮಾದಕವಸ್ತು ಮತ್ತು ಮದ್ಯಪಾನ ಸೇವನೆಯಿಂದ ಆರೋಗ್ಯ ಹದಗೆಡುತ್ತದೆ. ಕುಡಿತದ ಚಟ ಇರುವರಲ್ಲಿ ಶೇ 25-30ರಷ್ಟು ಮಂದಿ ಆತ್ಮಹತ್ಯೆಗೆ ಯತ್ನಿಸುತ್ತಾರೆ. ಮದ್ಯಪಾನ ಸೇವನೆಯಿಂದ ಕುಟುಂಬದಲ್ಲಿ ನೆಮ್ಮದಿ ಇಲ್ಲದಂತಾಗುತ್ತದೆ’ ಎಂದರು.
ಸಕಾರಿ ಆಸ್ಪತ್ರೆಯ ತಜ್ಞ ವೈದ್ಯ ಚಿದಾನಂದ್ ಮಾತನಾಡಿ, ‘ಕುಡಿತ ಬಿಡಿಸಲು 21 ದಿನ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತದೆ’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎ.ಎನ್. ಕಿಶೋರ್ ಕುಮಾರ್, ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿ. ಮಹೇಶ್,ಡಾ. ಪ್ರಜ್ವಲ್ ಮಾತನಾಡಿದರು. ಲಯನ್ಸ್ ಕ್ಲಬ್ ಪ್ರತಿನಿಧಿ ನಾಗರಾಜು, ಆಶಾ ಮಾರ್ಗದರ್ಶಿ ಶೋಭಾ ಇದ್ದರು.