ಹಾಸನ: ‘ಹಾಲಿ ಸಂಸದರೇ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ದೊಡ್ಡವರು (ಎಚ್.ಡಿ. ದೇವೇಗೌಡ) ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಸಂಶಯ ಅನಗತ್ಯ’ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇವೇಗೌಡರು ಈಗಾಗಲೇ ಪಕ್ಷದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ತಾಲ್ಲೂಕುಗಳಲ್ಲಿ ನಡೆದಿರುವ ಸಭೆಗಳಲ್ಲಿ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹೀಗಿರುವಾಗ ಅಭ್ಯರ್ಥಿ ಯಾರು ಎಂದು ಕೇಳುವ ಪ್ರಶ್ನೆ ಇಲ್ಲ’ ಎಂದು ಹೇಳಿದರು.
‘ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅವರು ನನಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿಯ ಕೆಲ ನಾಯಕರು ದೂರವಾಣಿ ಕರೆ ಮಾಡುವ ಮೂಲಕ ಕ್ಷೇತ್ರದಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ಮುಂದುವರಿಸಲು ತಿಳಿಸಿದ್ದಾರೆ. ಜಿಲ್ಲೆಯಲ್ಲಿ 4,890 ಗ್ರಾಮಗಳಿದ್ದು, ಪ್ರಚಾರ ಮುಂದುವರಿಸಿದ್ದೇನೆ’ ಎಂದರು.
‘ಬಿಜೆಪಿ– ಜೆಡಿಎಸ್ ಮೈತ್ರಿ ಬಳಿಕ ನಾವೆಲ್ಲರೂ ಪಕ್ಷದ ವರಿಷ್ಠರಾದ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇವೆ. ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಮುಗಿದಿದೆ. ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ವರಿಷ್ಠರೆಲ್ಲ ಸೇರಿ ಸಭೆ ನಡೆಸಿ, ಸೀಟು ಹಂಚಿಕೆ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ಮುಂದಿನ 10 ದಿನಗಳಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಹೆಚ್ಚಿದೆ’ ಎಂದು ತಿಳಿಸಿದರು.