ಹಾಸನ: ಹಲವು ವರ್ಷಗಳಿಂದ ನಡೆಯುತ್ತಿರುವ ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ
ಕೈಗೊಳ್ಳಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಡ್ರಗ್ ಮಾಫಿಯಾದವರು ಎಷ್ಟೇ ದೊಡ್ಡವರಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿ ಇದೆ. ಮುಖ್ಯಮಂತ್ರಿ, ಗೃಹ ಸಚಿವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದರು.
ಡ್ರಗ್ ವಿಚಾರ ಮುಂದಿಟ್ಟು ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ ಎಂಬ ಕೈ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರಿಗೆ ಏನು ಕೆಲಸ ಇದೆ. ಅವರಲ್ಲೇ ಸುಮಾರು ಗುಂಪಾಗಿದೆ, ಎತ್ತು ಏರಿಗೆ, ಕೋಣ ನೀರಿಗೆ ಎನ್ನುವ ಸ್ಥಿತಿ ಇದೆ. ರಾಜ್ಯದಲ್ಲಿ ಬಿಜೆಪಿ ಕೆಲಸ ನೋಡಿ ಕಾಂಗ್ರೆಸ್ ನಾಯಕರಿಗೆ ದಿಗ್ಭ್ರಮೆಯಾಗಿದೆ ಎಂದರು.
ಸಿ.ಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಇದೆಲ್ಲಾ ಮಾಧ್ಯಮಗಳ ಉಹಾಪೋಹ ಅಷ್ಟೇ. ಯಡಿಯೂರಪ್ಪ ಪಕ್ಷದ ಪ್ರಶ್ನಾತೀತ ನಾಯಕ. ಮೂರು ವರ್ಷ ಅವರೇ ಸಿ.ಎಂ ಆಗಿರುತ್ತಾರೆ. ಜಗದೀಶ್ ಶೆಟ್ಟರ್ ಅವರು ಕೈಗಾರಿಕಾ ಸಚಿವರು, ಪ್ರಭಾವಿ ನಾಯಕರು. ಕೈಗಾರಿಕಾ ವಿಚಾರ ಮಾತನಾಡಲು ದೆಹಲಿಗೆ ಭೇಟಿ ನೀಡಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.