ಹೆತ್ತೂರು: ಹೋಬಳಿಯ ವನಗೂರು ಅರಣ್ಯ ವ್ಯಾಪ್ತಿಗೆ ಸೇರಿದ ಗ್ರಾಮದಲ್ಲಿ ಗುರುವಾರ ರಾತ್ರಿಯಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.
ಮರಗತ್ತೂರು, ಯರಗಳ್ಳಿ, ಕುಮ್ತಹಳ್ಳಿ, ವನಗೂರು ನಡುವಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅವಿರತವಾಗಿ ಶ್ರಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.
‘ನಾಲ್ಕು ದಿನಗಳ ಹಿಂದೆ ಎಡಕುಮೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಇಲಾಖೆಯ ಸಿಬ್ಬಂದಿ ತೆರಳಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದೇವೆ’ ಎಂದು ಅರಣ್ಯ ರಕ್ಷಕ ನವೀನ್ ‘ಪ್ರಜಾವಾಣಿ’ಗೆ ತಿಳಿಸಿದರು.
ಇತ್ತೀಚೆಗಷ್ಟೇ ತಾಲ್ಲೂಕಿನ ಕಾಡುಮನೆ ಸಮೀಪದ ಶೋಲಾ ಕಾಡಿನಲ್ಲಿ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಬೆಂಕಿ ನಂದಿಸಲು ಹೋದ ಅರಣ್ಯಗಳು ಇಲಾಖೆ ಸಿಬ್ಬಂದಿಗಳಲ್ಲಿ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಬೆಟ್ಟ ಗುಡ್ಡಗಳಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ಅರಣ್ಯ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.