ಅರಕಲಗೂಡು: ಅನಾರೋಗ್ಯದಿಂದ ಮೃತಪಟ್ಟ ಪಟ್ಟಣದ ಯೋಧ ಬಿ.ಆರ್. ರಾಕೇಶ್ (24) ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಬಾಣದಹಳ್ಳಿಯಲ್ಲಿ ನೆರವೇರಿತು.
ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ ಯೋಧನನ್ನು ಹರಿಯಾಣದ ಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ತಾಲ್ಲೂಕು ಕಚೇರಿ ಆವರಣಕ್ಕೆ ಬಂದ ಯೋಧನ ಪಾರ್ಥಿವ ಶರೀರಕ್ಕೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಾಲ್ಲೂಕು ಆಡಳಿತದ ಪರವಾಗಿ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು.
ಬಳಿಕ 8.30ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಶಾಸಕ ಎ.ಟಿ.ರಾಮಸ್ವಾಮಿ, ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಪ್ರಮುಖರು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಪಟ್ಟಣದ ಕ್ರೀಡಾಂಗಣದಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಪೊಟ್ಯಾಟೊ ಕ್ಲಬ್ ಅಧ್ಯಕ್ಷ ಎಚ್.ಯೋಗಾರಮೇಶ್ ಅಂತಿಮ ನಮನ ಸಲ್ಲಿಸಿದರು. ನಂತರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಯೋಧನ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಸಲಾಯಿತು. ಈ ವೇಳೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಸ್ವಗ್ರಾಮ ಬಾಣದಹಳ್ಳಿ ಗ್ರಾಮಕ್ಕೆ ಯೋಧನ ಮೃತದೇಹ ಬಂದಾಗ ಕುಟುಂಬದವರ ರೋಧನ ಮುಗಿಲು ಮುಟ್ಟಿತು. ಸ್ವಲ್ಪ ಸಮಯ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ವೇಳೆ ಮಾಜಿ ಸಚಿವ ಎ.ಮಂಜು ಅಂತಿಮ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಸಶಸ್ತ್ರ ಮೀಸಲು ಪಡೆಯ ಪೊಲೀಸರು ಹಾಗೂ ಯೋಧರು ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.