ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: 11 ಲಕ್ಷ ಮಂದಿಗೆ ಮತದಾನದ ಹಕ್ಕು

ಅಂತಿಮ ಮತದಾರರ ಪಟ್ಟಿ ಸಿದ್ದ, 255 ಪಂಚಾಯಿತಿಗಳಿಗೆ ಚುನಾವಣೆ
Last Updated 18 ಸೆಪ್ಟೆಂಬರ್ 2020, 19:30 IST
ಅಕ್ಷರ ಗಾತ್ರ

ಹಾಸನ: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಕೈಗೊಂಡಿದ್ದು, ಅಂತಿಮ ಮತದಾರರ ಪಟ್ಟಿ ಸಿದ್ಧಪಡಿಸಿದೆ.

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಅಂತಿಮ ಮತದಾರರ ಪಟ್ಟಿ ಹಾಗೂ ಮತಗಟ್ಟೆಗಳನ್ನೂ ಗುರುತು ಮಾಡಲಾಗಿದೆ. ಈ ಬಾರಿ ಚುನಾವಣೆಯಲ್ಲಿ 11,43.017 ಮತದಾರರು ಹಕ್ಕು ಚಲಾಯಿಸುವ ಅರ್ಹತೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 267 ಗ್ರಾಮ ಪಂಚಾಯಿತಿಗಳ ಪೈಕಿ ಅವಧಿ ಮುಗಿದಿರುವ 255 ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕಿದೆ. ಇದಕ್ಕಾಗಿ 2040 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಉಳಿದ 12 ಗ್ರಾಮ ಪಂಚಾಯಿತಿಗಳ ಅವಧಿ ಮುಂದಿನ ಡಿಸೆಂಬರ್‌ಗೆ ಅಂತ್ಯಗೊಳ್ಳಲಿದೆ.

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ 11,43,017 ಮತದಾರರು ಇದ್ದಾರೆ. ಈ ಪೈಕಿ ಪುರುಷ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. 576938 ಪುರುಷರು ಮತದಾರರಿದ್ದರೆ, 566059 ಮಹಿಳೆಯರು ಮತ ಚಲಾವಣೆ ಹಕ್ಕು ಹೊಂದಿದ್ದಾರೆ, 20 ಮಂದಿ ಇತರೆ ಮತದಾರರಿದ್ದಾರೆ.

ಆಲೂರು ತಾಲ್ಲೂಕಿನ ಒಟ್ಟು 15 ಗ್ರಾಮ ಪಂಚಾಯಿತಿ ಪೈಕಿ 14ಕ್ಕೆ ಚುನಾವಣೆ ನಡೆಯಬೇಕಿದೆ. ಹಂಚೂರು ಪಂಚಾಯಿತಿ ಅವಧಿ ಇನ್ನೂ ಮುಗಿದಿಲ್ಲ. ಅರಕಲಗೂಡು ತಾಲ್ಲೂಕಿನ ಕೊಣನೂರು ಪಂಚಾಯಿತಿ ಹೊರತು ಪಡಿಸಿ ಉಳಿದ 35 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಅರಸೀಕೆರೆ ತಾಲ್ಲೂಕಿನ ನೇರ್ಲಿಗೆ, ಬಾಣವಾರ ಹೊರತು ಪಡಿಸಿ 43 ಪಂಚಾಯಿತಿಗಳಿಗೆ ಹಾಗೂ ಬೇಲೂರು ತಾಲ್ಲೂಕಿನ 37 ಗ್ರಾಮ ಪಂಚಾಯಿತಿಗಳಿಗೂ ಚುನಾವಣೆ ನಡೆಯಬೇಕಿದೆ.

ಹಾಸನ ತಾಲ್ಲೂಕಿನ 36 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಐದು ಗ್ರಾಮ ಪಂಚಾಯಿತಿ ಅವಧಿ ಡಿಸೆಂಬರ್‌ಗೆ ಪೂರ್ಣಗೊಳ್ಳಲಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಹೊರತು ಪಡಿಸಿ ಉಳಿದ 40 ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಸಕಲೇಶಪುರ ತಾಲ್ಲೂಕಿನ ವಣಗೂರು ಮತ್ತು ಉಚ್ಚಂಗಿ ಹೊರತು ಪಡಿಸಿ 22 ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಹೊಳೆನರಸೀಪುರ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳಿಗೂ ಚುನಾವಣೆ ನಡೆಯಬೇಕಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಚುನಾವಣಾ ಆಯೋಗ ಯಾವಾಗ ಬೇಕಾದರೂ ದಿನಾಂಕ ಘೋಷಿಸಬಹುದು. ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ.

‘ಚುನಾವಣಾ ಆಯೋಗದ ನಿರ್ದೇಶನದಂದತೆ ಗ್ರಾಮ ಪಂಚಾಯಿತಿ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ದೋಷವಿಲ್ಲದ್ದಂತೆ ಮತದಾರರ ಪಟ್ಟಿ ಸಿದ್ಧ ಪಡಿಸಲಾಗಿದೆ. ಹಿಂದೆ ಹೆಸರು ನಾಪತ್ತೆ, ಹೆಸರು ಅದಲು–ಬದಲು, ತಪ್ಪು ವಿಳಾಸ ನಮೂದು ಬಗ್ಗೆ ದೂರುಗಳು ಇದ್ದವು. ಈಗ ಎಲ್ಲವನ್ನು ಸರಿಪಡಿಸಲಾಗಿದೆ. ಮತಗಟ್ಟೆಗಳನ್ನೂ ಗುರುತು ಮಾಡಲಾಗಿದೆ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ ಕೂಡಲೇ ಚುನಾವಣೆ ಪ್ರಕ್ರಿಯೆ ಆರಂಭಿಸಲಾಗುವುದು.’ಎಂದು ಚುನಾವಣಾ ಶಾಖೆ ತಹಶೀಲ್ದಾರ್‌ ಪದ್ಮನಾಭಶಾಸ್ತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಈ ಚುನಾವಣೆ ಸಹಕಾರಿ ಆಗುವುದರಿಂದ ರಾಜಕೀಯ ಪಕ್ಷಗಳು ಹೆಚ್ಚಿನ ಆದ್ಯತೆ ನೀಡಿವೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲಾ, ಗ್ರಾಮ ಪಂಚಾಯಿತಿ ಬಗ್ಗೆ ಹೆಚ್ಚು ಗಮನಹರಿಸುವಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT