ಹಾಸನ: ಹಾಸನಾಂಬೆ ದರ್ಶನಕ್ಕೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಶನಿವಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ಮುಚ್ಚಲಾಯಿತು.
ಅ.28ರಿಂದ ನ.6ರ ವರೆಗೆ ಬಾಗಿಲು ತೆರೆದಿದ್ದ ಸಮಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಮಧ್ಯಾಹ್ನ 1.04ಕ್ಕೆ ಗರ್ಭಗುಡಿ ಬಾಗಿಲು ಮುಚ್ಚುತ್ತಿದ್ದಂತೆ ‘ಹಾಸನಾಂಬೆಗೆ ಜೈ’ ಎಂಬ ಜಯಘೋಷ ಭಕ್ತರಿಂದ ಮೊಳಗಿತು.
ಹತ್ತು ದಿನ ದರ್ಶನ ಭಾಗ್ಯ ಕರುಣಿಸಿದ ಅಧಿದೇವತೆ ಮತ್ತೆ ಒಂದು ವರ್ಷ ಮರೆಗೆ ಸರಿದಳು. ಸಂಪ್ರದಾಯದ ಪ್ರಕಾರ ದೇವಿಯ ಸನ್ನಿಧಿಯಲ್ಲಿ ಹೂ, ನೈವೇದ್ಯ ಇಟ್ಟು, ದೀಪ ಹಚ್ಚಲಾಯಿತು. ಕಡೆ ದಿನವೂ ದೇವಿ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧಿಕಾರಿ ಆರ್.ಗಿರೀಶ್, ತಹಶೀಲ್ದಾರ್ ನಟೇಶ್, ದೇವಾಲಯದ ಆಡಳಿತಾಧಿಕಾರಿ ಬಿ.ಎ.ಜಗದೀಶ್, ಶಾಸಕ ಪ್ರೀತಂ ಗೌಡ ಬಾಗಿಲು ಹಾಕುವಾಗ ಹಾಜರಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು ಬೀಗ ಹಾಕಿ ಸೀಲ್ ಒತ್ತಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.