ಹಾಸನ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಕುರಿತು ಯಾವುದೇ ಸಭೆ, ಸಮಾರಂಭದಲ್ಲಿ ಹೇಳಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಭಾಕರ್ ಭಟ್ ಅವರದು ವೈಯಕ್ತಿಕ ಹೇಳಿಕೆ. ಅವರ ಜತೆ ಮಾತನಾಡಿರುವುದು ಗೊತ್ತಿಲ್ಲ. ನಮ್ಮ ಜತೆ ಈ ವಿಚಾರ ಚರ್ಚಿಸಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ 150 ಸೀಟು ಗೆಲ್ಲುತ್ತೇವೆ ಎಂದು ಬಿಎಸ್ವೈ ಹೇಳಿದ್ದಾರೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇದೆ’ ಎಂದರು.
ಉಪ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಆಳವಾದ ಮಾಹಿತಿಯಿಲ್ಲ. ಮುಖ್ಯಮಂತ್ರಿ ದಾವೊಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದರು.
ಅರಕಲಗೂಡು, ಹಾಸನ, ಪಿರಿಯಾಪಟ್ಟಣ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರವಲ್ಲ. ರಾಜ್ಯದ ಹಲವೆಡೆ ಟೋಲ್ ಸಂಗ್ರಹಕ್ಕೆ ಸರ್ಕಾರ ಅವಕಾಶ ನೀಡಿದೆ. ಕೃಷಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಉಚಿತ ಪ್ರವೇಶ ನೀಡುವ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ಪಡೆಯುವುದಾಗಿ ಹೇಳಿದರು.