ಹಾಸನ: ‘ಜೈನರ ಆರಾಧ್ಯ ದೈವ ಬಾಹುಬಲಿ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮೈಸೂರಿನ ಪಾಲಿಕೆ ಮಾಜಿ ಸದಸ್ಯ ಆಯೂಬ್ ಖಾನ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಹಾಸನ ಜೈನ ಸಮಾಜದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ದೊಡ್ಡ ಬಸ್ತಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಮಹಾವೀರ ವೃತ್ತ,ಹೇಮಾವತಿ ಪ್ರತಿಮೆ, ಎನ್.ಆರ್. ವೃತ್ತ, ಬಿ.ಎಂ. ರಸ್ತೆ ಮೂಲಕ ಜಿಲ್ಲಾಡಳಿತ ಭವನತಲುಪಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ಇತ್ತೀಚೆಗೆ ವಾಹಿನಿಯೊಂದಕ್ಕೆ ಸಂದರ್ಶನ ನೀಡುವಾಗ ಆಯೂಬ್ ಖಾನ್ , ‘ಗೊಮ್ಮಟೇಶ್ವರನನ್ನು ಬೆಟ್ಟದ ಮೇಲೆ ನಿಲ್ಲಿಸಿದ್ದೀರಿ. ಅಶ್ಲೀಲವಾಗಿ ನಿಂತ ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ’ ಎಂದು ಉದ್ದೇಶಪೂರ್ವಕವಾಗಿ ಹೇಳಿಕ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಈ ವಿಡಿಯೊ ತುಣುಕು ಸಾಮಾಜಿಕಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹೇಳಿಕೆ ನೀಡಿದ್ದು ಸರಿಯಲ್ಲ. ಅವರ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.
ಈ ರೀತಿಯ ಹೇಳಿಕೆಗಳನ್ನು ನೀಡಿ ಶಾಂತಿ ಕದಡಲು ಪ್ರಯತ್ನಿಸುತ್ತಿರುವವರ ವಿರುದ್ಧಧಾರ್ಮಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜೈನ ಸಮಾಜ ತೀವ್ರ ಹೋರಾಟನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಹಾಸನ ಜಿಲ್ಲಾ ಜೈನ ಸಮಾಜದ ಅಧ್ಯಕ್ಷ ಎಂ. ಅಜಿತ್ ಕುಮಾರ್,ಉಪಾಧ್ಯಕ್ಷ ಎಚ್.ಎನ್. ರವಿಂದ್ರ ಕುಮಾರ್, ಕಾರ್ಯದರ್ಶಿ ಕೆ.ಜಿ. ಬ್ರಮೇಶ್,ಖಜಾಂಚಿ ಎಚ್.ಡಿ. ಶಾಂತಿಪ್ರಸಾದ್, ಜಂಠಿ ಕಾರ್ಯದರ್ಶಿ ಪ್ರಮೋದ್ ಕುಮಾರ್ ಭಾಗವಹಿಸಿದ್ದರು.