ಹಾಸನ: ನಗರದ ಹೊರವಲಯದ ನಾಗತವಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ 1.30 ರಿಂದ 1.45 ರ ವೇಳೆಯಲ್ಲಿ ಗ್ರಾನೈಟ್ ಉದ್ಯಮಿ ಹಾಗೂ ಜೆಡಿಎಸ್ ಮುಖಂಡ ಕೃಷ್ಣೇಗೌಡ (55) ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ, ಕೊಲೆ ಮಾಡಲಾಗಿದೆ.
ಅವರು ಫ್ಯಾಕ್ಟರಿಯ ಗೇಟ್ ತೆರೆಯಲು ವಾಹನದಿಂದ ಇಳಿದಾಗ, ನಾಲ್ಕೈದು ಜನರ ತಂಡ ಹಿಂದಿನಿಂದ ಹಲ್ಲೆ ಮಾಡಿತು. ಕುತ್ತಿಗೆ, ತಲೆ, ಕೈ, ಕಾಲುಗಳಿಗೆ ತೀವ್ರ ಗಾಯವಾಗಿ ರಕ್ತಸ್ರಾವದಿಂದ ಕೃಷ್ಣೇಗೌಡ ಸ್ಥಳದಲ್ಲೇ ಮೃತಪಟ್ಟರು.
‘ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಶಾಸಕ ಎಚ್.ಡಿ. ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೃಷ್ಣೇಗೌಡರು, ಜೆಡಿಎಸ್ನಿಂದ ನಗರಸಭೆ ಚುನಾವಣೆಗೆ ಸ್ಪರ್ಧಿಸಿ, ಸೋತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.