ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25ಕ್ಕೆ ಸಿಎಂ ಕಚೇರಿ ಎದುರು ಜೆಡಿಎಸ್‌ ಶಾಸಕರ ಧರಣಿ

ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯ
Last Updated 22 ಜನವರಿ 2021, 14:22 IST
ಅಕ್ಷರ ಗಾತ್ರ

ಹಾಸನ: ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಯೋಜನೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಜಿಲ್ಲೆಯ ಆರು ಶಾಸಕರೊಂದಿಗೆ ಜ. 25ರಂದು ಬೆಂಗಳೂರಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

ಪ್ರತಿಭಟನೆಯಲ್ಲಿ ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ ಸಹ ಪಾಲ್ಗೊಳ್ಳುವರು. ಅದೇ ದಿನ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರು, ನಗರಸಭೆ ಸದಸ್ಯರು, ಗ್ರಾಮ ಪಂಚಾಯಿತಿ ಜೆಡಿಎಸ್‌ ಬೆಂಬಲಿತ ನೂತನ ಸದಸ್ಯರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 18 ತಿಂಗಳು ಕಳೆಯಿತು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿತ್ತು. ಶೇಕಡಾ 5 ರಷ್ಟು ಬಿಟ್ಟರೆ ಬಹುತೇಕ ಕಾಮಗಾರಿಗಳನ್ನು ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿಸಿದರು.

ಈಗಾಗಲೇ ಮೂರು, ನಾಲ್ಕು ಬಾರಿ ಸಿ.ಎಂ ಭೇಟಿ ಮಾಡಿ ಸಮಸ್ಯೆಗಳ ಮನವರಿಕೆ ಮಾಡಲಾಗಿದೆ. ಅವರು ನೀಡಿದ ಭರವಸೆ ಇದುವರೆಗೂ ಈಡೇರಿಲ್ಲ. ಅತಿವೃಷ್ಟಿಯಿಂದ ಸಕಲೇಶಪುರ, ಬೇಲೂರು, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ಅಂದಾಜು₹ 28 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ. ಆದರೆ ಯಾವುದೇ ನದಿ, ಹಳ್ಳಗಳು ಇಲ್ಲದ ಹಾಸನ ಕ್ಷೇತ್ರಕ್ಕೆ ಮಾತ್ರ ₹ 12 ಕೋಟಿ ನೆರೆ ಪರಿಹಾರವನ್ನು ಯಾವ ಆಧಾರದಲ್ಲಿ ನೀಡಲಾಗಿದೆ ಎಂದು ಪ್ರಶ್ನಿಸಿದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಕಲೇಶಪುರ, ಅರಸೀಕೆರೆ ಮತ್ತು ಬೇಲೂರು ತಾಲ್ಲೂಕುಗಳಿಗೆ ನೀಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿ ₹60 ಕೋಟಿ ಪರಿಹಾರವನ್ನು ತಡೆಹಿಡಿಯಲಾಗಿದೆ ಎಂದು ದೂರಿದರು.

ಶಾಸಕ ಎಚ್‌.ಡಿ. ರೇವಣ್ಣ ಮಾತನಾಡಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಯಾವ ಯೋಜನೆ ಅವೈಜ್ಞಾನಿಕ ಎಂಬುದನ್ನು ತಿಳಿಸಲಿ. ಒಂದು ವೇಳೆ ಅವೈಜ್ಞಾನಿಕ ಕಾಮಗಾರಿ ಕೈಗೆತ್ತಿಕೊಂಡಿದ್ದರೆ ತಡೆಹಿಡಿಯಲಿ. ₹144 ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ಕೆರೆಯಲ್ಲಿ ಉದ್ಯಾನ, ಮಕ್ಕಳ ರೈಲು ನಿರ್ಮಾಣಹೊಸ ಯೋಜನೆ ಅಲ್ಲ, 2004ಕ್ಕೂ ಹಿಂದೆಯೇ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದರು.

ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಲಾಗಿತ್ತು. ಜಿಲ್ಲೆಯಲ್ಲಿ ಜೆಡಿಎಸ್‌ ಶಾಸಕರು ಇದ್ದಾರೆ ಎಂಬ ಕಾರಣದಿಂದ ಅನುದಾನ ತಡೆ ಹಿಡಿಯಲಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು.

ಶಾಸಕ ಸಿ.ಎನ್‌. ಬಾಲಕೃಷ್ಣ ಮಾತನಾಡಿ, ಕ್ಷೇತ್ರದ ಪ್ರವಾಸೋದ್ಯಮ ಇಲಾಖೆಯ ಅನುದಾನವನ್ನು ತಡೆ ಹಿಡಿದು ₹67 ಕೋಟಿ ಅನುದಾನವನ್ನು ಚಿಕ್ಕಮಗಳೂರಿಗೆ ವಿನಿಯೋಗ ಮಾಡಿಕೊಳ್ಳಲಾಯಿತು. ಈ ರೀತಿ ಅನೇಕ ಉದಾಹರಣೆಗಳು ಇವೆ. ಅಭಿವೃದ್ಧಿ ವಿಚಾರದಲ್ಲಿ ಈ ರೀತಿ ತಾರತಮ್ಯ ಮಾಡುತ್ತಿರುವುದರಿಂದ ಧರಣಿ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಗೋಷ್ಠಿಯಲ್ಲಿ ಶಾಸಕ ಕೆ.ಎಸ್‌. ಲಿಂಗೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT