ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿ: ಶಾಸಕ ಎಚ್‌.ಡಿ. ರೇವಣ್ಣ ಒತ್ತಾಯ

Last Updated 18 ಸೆಪ್ಟೆಂಬರ್ 2020, 13:45 IST
ಅಕ್ಷರ ಗಾತ್ರ

ಹಾಸನ: ಮೆಕ್ಕೆಜೋಳ ಬೆಲೆ ಕುಸಿತದಿಂದ ರೈತರು ಕಂಗಲಾಗಿದ್ದು, ಸರ್ಕಾರ ಕೂಡಲೇ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದರು.

ಜಿಲ್ಲೆಯಲ್ಲಿ ಈ ಬಾರಿ ಆರು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಉತ್ಪಾದನೆ ಗುರಿ ಹೊಂದಲಾಗಿದೆ. ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ ₹ 1200 – ₹ 1300 ದರ ಇದೆ. ಅತಿಯಾದ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ. ಕ್ವಿಂಟಲ್ಗೆ ₹ 1750 ಬೆಂಬಲ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರು ವಿಷ ತೆಗೆದುಕೊಳ್ಳವುದುನ್ನು ತಪ್ಪಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಪಶು ಆಹಾರಕ್ಕಾಗಿ ಕೆಎಂಎಫ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳದ ಅವಶ್ಯಕತೆ ಇದೆ. ಆದರೂ ಖರೀದಿಸುತ್ತಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

‘ಜಿಲ್ಲೆಯ ವರ್ಗಾವಣೆ ದಂಧೆ ನಡೆಯುತ್ತಿದೆ. ವರ್ಗಾವಣೆಗಾಗಿ ಅಧಿಕಾರಿಗಳು ಕೆಳ ಮಟ್ಟಕ್ಕೆ ಇಳಿಯುತ್ತಿದ್ದಾರೆ. ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಒಬ್ಬರು ವರ್ಗಾವಣೆಗಾಗಿ ₹ 1 ಕೋಟಿ ನೀಡಿದ್ದಾರೆ. ಸಿಪಿಐ ವರ್ಗಾವಣೆಗೆ ₹ 50 ಲಕ್ಷ ಪಡೆಯಲಾಗಿದೆ. ಹಣ ನೀಡಿ ಬಂದಿರುವುದಾಗಿ ಅಧಿಕಾರಿಗಳೇ ಹೇಳುತ್ತಿದ್ದಾರೆ. ಗೃಹ ಸಚಿವರ ಬಗ್ಗೆ ಗೌರವವಿದ್ದು, ಅವರ ಮೇಲೆ ಆರೋಪ ಮಾಡುತ್ತಿಲ್ಲ. ಆದರೆ, ಯಾರಿಗೆ ಹಣ ತಲುಪುತ್ತಿದೆ ಎಂಬುದನ್ನು ಪತ್ತೆ ಮಾಡಬೇಕು. ಕೇವಲ ವರ್ಗಾವಣೆಗಾಗಿ ಆತ್ಮಗೌರವ ಕಳೆದುಕೊಳ್ಳಬೇಡಿ. ಆತ್ಮಸಾಕ್ಷಿಗೆ
ವಿರುದ್ಧವಾಗಿ ನಡೆದುಕೊಂಡರೆ, ಒಂದಲ್ಲ ಒಂದು ದಿನ ನಿಮ್ಮ ಕುಟುಂಬಕ್ಕೆ ತೊಂದರೆಯಾಗಲಿದೆ’ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದೆ. ಈವರೆಗೆ 249 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಕಡಿಮೆ ಮಾಡುವ ಕಡೆ ಗಮನಹರಿಸಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳಲ್ಲಿ ಹತ್ತು ಲಕ್ಷ ಮಂದಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಹಣ ಇಲ್ಲದ ಕಾರಣ ಕೂಲಿಕಾರರು, ರೈತರು, ಕಾರ್ಮಿಕರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದುಪ್ಪಟ್ಟು ಹಣ ವಸೂಲು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಹಲವು ಕಾಮಗಾರಿಗಳಿಗೆ ತಡೆ ನೀಡಲಾಗಿದೆ. ದ್ವೇಷದ ರಾಜಕಾರಣ ಎಲ್ಲಿಯವರೆಗೂ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

‘ಶಿಕ್ಷಣ ಇಲಾಖೆ ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಹೆತ್ತೂರು ಕಾಲೇಜನ್ನು ಮುಚ್ಚಲು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಹೈ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಿಕ್ಷಣ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವುದು ಎಷ್ಟು ಸರಿ.ಅಧಿಕಾರ ಶಾಶ್ವತವಲ್ಲ ಜನರ ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಮುಂದಾಗಬೇಕು. ವರ್ಗಾವಣೆ ಹಾಗೂ ಅಧಿಕಾರ ಉಳಿಸಿಕೊಳ್ಳುವುದು ಇದ್ದೇ ಇರುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು

ಸುದ್ದಿಗೋಷ್ಠಿಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT