ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಸಿಮೆಂಟ್ ಮಂಜು

Published 30 ಮೇ 2023, 15:28 IST
Last Updated 30 ಮೇ 2023, 15:28 IST
ಅಕ್ಷರ ಗಾತ್ರ

ಹಾಸನ: ಕ್ಷೇತ್ರದ ಜನರು ಬಹಳ ನಿರೀಕ್ಷೆಯನ್ನು ಇಟ್ಟುಕೊಂಡು ನನಗೆ ಈ ಬಾರಿ ಆಶೀರ್ವಾದ ಮಾಡಿದ್ದು, ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಕಲೇಶಪುರ ಆಲೂರು ಕ್ಷೇತ್ರದಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ಆನೆ ಹಾವಳಿ, ವೈದ್ಯರ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿರುವುದು ಹೆಚ್ಚು ಸಹಕಾರಿಯಾಗಿದೆ. ಇದರಿಂದ ಆನೆ ಸಂಚಾರದ ಮಾಹಿತಿ ದೊರೆಯಲಿದ್ದು, ಹೆಚ್ಚಿನ ಅನಾಹುತ ತಪ್ಪಿಸಬಹುದಾಗಿದೆ. ಒಂದು ಪುಂಡಾನೆಯನ್ನು ದುಬಾರೆಗೆ ಸ್ಥಳಾಂತರಿಸಲಾಗಿದ್ದು, ಆನೆ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಸಕಲೇಶಪುರ -ಆಲೂರು ಭಾಗದಲ್ಲಿ ಮಳೆಗಾಲ ಹೊರತುಪಡಿಸಿ, ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕಿನ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ವೈದ್ಯರ ಕೊರತೆ ಇದೆ. ಇದನ್ನು ನೀಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು. ಕ್ರಾಫರ್ಡ್ ಆಸ್ಪತ್ರೆಗೆ ಹೃದ್ರೋಗ ತಜ್ಞರನ್ನು ನೇಮಕ ಮಾಡುವ ಕುರಿತು ಮನವಿ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೀತಂ ಗೌಡ ಒಲವು ವ್ಯಕ್ತಪಡಿಸಿಲ್ಲ.
ಸಿಮೆಂಟ್‌ ಮಂಜು, ಶಾಸಕ

ಈ ಸಂಬಂಧ ಡಿಎಚ್ಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಆದಷ್ಟು ಶೀಘ್ರ ವೈದ್ಯರ ಕೊರತೆಯನ್ನು ನೀಗಿಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಪಕ್ಷ ಬಲವರ್ಧನೆಗೆ ಪ್ರಯತ್ನ ಮಾಡಲಾಗುವುದು. ಜಿಲ್ಲೆಯಲ್ಲಿ ಎರಡು ಶಾಸಕ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷ ಎರಡನೇ ಸ್ಥಾನದಲ್ಲಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕೆ ಪ್ರಯತ್ನ ಮುಂದುವರಿಯಲಿದೆ ಎಂದರು.

ಸಕಲೇಶಪುರ ಭಾಗದ ಅರಣ್ಯ ಪ್ರದೇಶದಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿರುವ ಬಡ ಕುಟುಂಬಗಳನ್ನು ಯಾವುದೇ ಕಾರಣಕ್ಕೂ ತೆರವು ಮಾಡದಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದು, ಇವರಿಗೆ ಶಾಶ್ವತ ನೆಲೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಂಜು ಭರವಸೆ ನೀಡಿದರು.

ಪ್ರಸನ್ನ ಕುಮಾರ್, ಪ್ರವೀಣ್, ಪ್ರಕಾಶ್, ಐನೆಟ್ ವಿಜಯ್ ಕುಮಾರ್  ಇದ್ದರು.

ಇನ್ನೆರಡು ತಿಂಗಳಲ್ಲಿ ಭೂಕುಸಿತ ಸಮಸ್ಯೆಗೆ ಪರಿಹಾರ

ಸಕಲೇಶಪುರ ಹೆದ್ದಾರಿಯ ಒಂದು ಮಾರ್ಗ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಶಾಸಕ ಸಿಮೆಂಟ್‌ ಮಂಜು ಹೇಳಿದರು. ಬೆಂಗಳೂರು-ಮಂಗಳೂರು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದ ಮೂಲಕ ಹಾದು ಹೋಗಿದ್ದು ದೋಣಿಗಾಲ್ ಸಮೀಪ ಪದೇ ಪದೇ ಭೂಕುಸಿತ ಉಂಟಾಗುತ್ತಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಹೆದ್ದಾರಿ ಅಧಿಕಾರಿಗಳು ಇನ್ನೂ 15 ದಿನದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT