ಹಾಸನ: ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಮೈತ್ರಿ ಕೂಟದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸೂಚನೆಯಂತೆ ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲಿಸಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಅದಕ್ಕಾಗಿ ಎಲ್ಲರೂ ಅಭ್ಯರ್ಥಿಗಳ ಗೆಲುವಿಗೆ ಕೈ ಜೋಡಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಎರಡೂ ಪಕ್ಷದ ಕಾರ್ಯಕರ್ತರ ನಡುವಿನ ಗೊಂದಲಗಳನ್ನು ಬಗೆಹರಿಸಲಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಮೈತ್ರಿ ಅಭ್ಯರ್ಥಿಗೆ ಉತ್ತಮ ವಾತಾವರಣವಿದೆ ಎಂದು ತಿಳಿಸಿದರು.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ಮಾಹಿತಿ ಪಡೆದು ಕಠಿಣ ಕ್ರಮ ತೆಗದುಕೊಳ್ಳಲಾಗುವುದು. ಕಾರ್ಯಕರ್ತರ ನೋವುಗಳನ್ನು ಸಹಿಸಿಕೊಂಡು ಹೋಗುವುದು ಕಷ್ಟ. ಆದರೆ, ಮೇಲ್ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದರು.
ಹಿರಿಯ ಮುಖಂಡ ಎಚ್.ಎಂ.ವಿಶ್ವನಾಥ್ ಅವರು ಮೈತ್ರಿ ಕೂಟದ ಅಭ್ಯರ್ಥಿ ಕುರಿತು ನೀಡಿರುವ ಹೇಳಿಕೆ ಹೈಕಮಾಂಡ್ ಹಾಗೂ ಮೈತ್ರಿ ಧರ್ಮ ಪಾಲನೆ ವಿರುದ್ಧವಾಗಿದೆ. ಈ ಕುರಿತು ಕೆಪಿಸಿಸಿಗೆ ದೂರು ನೀಡಲಾಗುವುದು. ಸಮಿತಿ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಏ.11 ರಂದು ಹಾಸನದಲ್ಲಿ ಎಚ್.ಡಿ.ದೇವೇಗೌಡ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಡಿ.ಸಿ.ಸಣ್ಣಸ್ವಾಮಿ, ನೀಲಕಂಠ,ರಿಝ್ವಾನ್, ರಂಗಸ್ವಾಮಿ ಇದ್ದರು.