ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ

ಶಾಲಾ, ಕಾಲೇಜುಗಳಲ್ಲಿ ವಿವಿಧ ಚಟುವಟಿಕೆ ನಡೆಸಲು ಸಿಇಒ ಪರಮೇಶ್‌ ಸೂಚನೆ
Last Updated 25 ಆಗಸ್ಟ್ 2021, 13:20 IST
ಅಕ್ಷರ ಗಾತ್ರ

ಹಾಸನ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಬಿ.ಎ. ಪರಮೇಶ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಶಾಲಾ, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆ, ಮತದಾರರ ಜಾಗೃತಿ ಕುರಿತು ಹಾಗೂ ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಬಗ್ಗೆ ಅಧಿಕಾರಿಗಳು, ಪ್ರಾಂಶುಪಾಲರ ಸಭೆ ನಡೆಸಿ ಮಾತನಾಡಿದರು.

ಮತದಾರರ ಜಾಗೃತಿ ನಿರಂತರ ಪ್ರಕ್ರಿಯೆಯಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಲ್ಲಿ ಎರಡು ವರ್ಷಗಳಿಂದ ಭೌತಿಕವಾಗಿ, ಗುಂಪು ಚಟುವಟಿಕೆ ನಡೆಸಲು ಸಾಧ್ಯವಾಗಿಲ್ಲ. ಆದರೆ, ಆನ್‍ಲೈನ್ ಸ್ಪರ್ಧೆಗಳನ್ನು ನಡೆಸಲಾಗಿದೆ. ಈ ಬಾರಿಯೂ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಪೂರಕವಾಗಿ ಹಾಗೂ ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವದ ಕುರಿತು ಶಾಲೆ, ಪದವಿ ಪೂರ್ವ, ಮತ್ತು ಪದವಿ ಕಾಲೇಜುಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರಿವು ಮೂಡಿಸುವುದರ ಜತೆಗೆ ಚುನಾವಣೆಗಳಲ್ಲಿ ಅರ್ಹ ಮತದಾರರು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪದವಿ, ಪದವಿ ಪೂರ್ವ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳೂ ಹೆಚ್ಚು ಸಕ್ರಿಯವಾಗಿ ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜು ಹಂತ, ತಾಲ್ಲೂಕು ಹಾಗೂ ಜಿಲ್ಲಾ ಹಂತದಲ್ಲಿ ಮತದಾರರ ಜಾಗೃತಿ ಚಟುವಟಿಕೆ ಹಾಗೂ ಸ್ವಾತಂತ್ರ್ಯೋತ್ಸವದ ಸುವರ್ಣ ಮಹೋತ್ಸವ ಕಾರ್ಯಕ್ರಮಗಳನ್ನು ನಡೆಸಿರುವ ಕುರಿತು ವರದಿ ಸಲ್ಲಿಸಬೇಕು ಹಾಗೂ ಚುನಾವಣಾ ಆಯೋಗದಲ್ಲಿ ಗೂಗಲ್ ಸ್ಪ್ರೆಡ್ ಶೀಟ್‍ನಲ್ಲಿ ನಿಗದಿತ ಅವಧಿಯೊಳಗೆ ದಾಖಲಿಸಬೇಕು ಎಂದು ಅವರು ತಿಳಿಸಿದರು.

ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಮಾತನಾಡಿ, ಸಾಮಾಜಿಕ ಜಾಲತಾಣಗಳು ಮತ್ತು ಸಮೂಹ ಮಾಧ್ಯಮಗಳು, ನವ ಮಾಧ್ಯಮಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚು ಸಕ್ರಿಯವಾಗಿ ಮತದಾರರ ಜಾಗೃತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸಬಹುದು ಎಂದು ನುಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಶಾಲಾ, ಕಾಲೇಜು ಹಂತಗಳ ನೋಡಲ್ ಅಧಿಕಾರಿಗಳು ಸ್ಪರ್ಧೆಗಳನ್ನು ಸಂಘಟಿಸಬೇಕು. ತಾಲ್ಲೂಕು ಹಂತದ ತರಬೇತಿಯ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ವಹಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಸ್ವೀಪ್ ನೋಡಲ್ ಅಧಿಕಾರಿ ಕಾಂತರಾಜು ಅವರು ಸ್ವೀಪ್ ಚಟುವಟಿಕೆ ಉದ್ದೇಶ, ಚುನಾಚಣಾ ಆಯೋಗದ ಸೂಚನೆ, ಸ್ಪರ್ಧೆಗಳನ್ನು ಸಂಘಟಿಸುವ ಸ್ವರೂಪದ ಬಗ್ಗೆ ಸಭೆಯಲ್ಲಿ ತರಬೇತಿ ನೀಡಿದರು.

ಸಭೆಯಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹಾಲಿಂಗಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಂಶುಪಾಲರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT