ಅರಸೀಕೆರೆ : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸರ್ಕಾರಿ ನಿಗದಿತ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ವಿತರಣೆಯಾಗುವ ಔಷಧಿಗಳ ಕೊರತೆಯಾಗಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಸೂಚಿಸಿದರು .
ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಜತೆಗೆ ಆಸ್ಪತ್ರೆ ಆವರಣದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.
ಅರಸೀಕೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ಬಂದ ಕಾರಣ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸರ್ಕಾರಿ ಆಸ್ಪತ್ರೆ ವೈದ್ಯರು ನಿತ್ಯದ ಕರ್ತವ್ಯದ ಅವಧಿಯಲ್ಲಿ ಖಾಸಗಿಯಾಗಿ ಸೇವೆ ಸಲ್ಲಿಸುವುದನ್ನು ನಿಲ್ಲಿಸಬೇಕು. ಸಮಯಕ್ಕೆ ಸರಿಯಾಗಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದರು.
ಕಳೆದ ವಾರ ಒಂದೇ ದಿನ 300 ಟಿಟಿ ಇಂಜೆಕ್ಷನ್ ಅನ್ನು ರೋಗಿಗಳಿಗೆ ಉಪಯೋಗಿಸಿದ ಪರಿಣಾಮ, ಆ ದಿನ ಖಾಲಿಯಾಗಿತ್ತು. ಪ್ರಸ್ತುತ ಯಾವುದೇ ಕೊರತೆಯಿಲ್ಲ. ಡಯಾಲಿಸಿಸ್ ಕೇಂದ್ರದಲ್ಲಿ ಹೊಸದಾಗಿ ಇನ್ನೊಂದು ಜನರೇಟರ್ ಅಳವಡಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕರಿಯಪ್ಪ ಅವರನ್ನು ಸಂಪರ್ಕಿಸಬಹುದು ಎಂದರು.
ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಮುಖಗವಸು ಧರಿಸಿ, ಪರಸ್ಪರ ವ್ಯಕ್ತಿಗತ ಅಂತರ ಕಾಯ್ದುಕೊಂಡು ಕೋವಿಡ್ 19 ವೈರಸ್ ನಿಗ್ರಹಕ್ಕೆ ಸಹಕರಿಸಬೇಕು ಎಂದರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಹಾಗೂ ತಹಶೀಲ್ದಾರ್ ಸಂತೋಷ್ ಕುಮಾರ್, ಆಸ್ಪತ್ರೆ ವೈದ್ಯರು ಮತ್ತು ಆರೋಗ್ಯ ಸಹಾಯಕರಿಗೆ ಅಭಿನಂದಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ನಾಗಪ್ಪ, ವೈದ್ಯಾಧಿಕಾರಿ ಡಾ.ಕರಿಯಪ್ಪ, ದಂತ ವೈದ್ಯೆ ಡಾ.ಡಿಂಪಲ್, ಆರೋಗ್ಯ ಸಹಾಯಕ ಲೋಕೇಶ್, ವೈ.ಬಿ.ಖಾನ್, ರೈತ ಸಂಘದ ಅಧ್ಯಕ್ಷ ಕನ್ನ ಕಂಚೇನಹಳ್ಳಿ ಪ್ರಸನ್ನಕುಮಾರ್ ಇದ್ದರು.