ಹಾಸನ: ‘ಮಳೆಹಾನಿ ಕುರಿತು ಸಮೀಕ್ಷೆ ನಡೆಸಲು ಹಾಸನ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಸಭೆ ನಡೆಸಿದ ಬಿಜೆಪಿ ಶಾಸಕರಿಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕೆಂಬ ಸೌಜನ್ಯವೂ ಇಲ್ಲ’ ಎಂದು ಸಂಸದ ಪ್ರಜ್ವಲ್ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಪ್ರವಾಹ ಸಂತ್ರಸ್ತರಿಗೆ ನೆರವು ಕಲ್ಪಿಸಲು ಬಂದವರು ಜಿಲ್ಲೆಯ ಜನ ಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಇಂಥ ಸಂದರ್ಭದಲ್ಲೂ ಕೀಳುಮಟ್ಟದ ರಾಜಕೀಯ ಮಾಡಬಾರದು. ಪಕ್ಷಭೇದ ಮರೆತು ಒಗ್ಗಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.