ಹಾಸನ: ಸರ್ಕಾರಿ ಜಾಗವನ್ನು ನಿಯಮಬಾಹಿರವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಪುತ್ರದ್ವಯರಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ.
ಸಚಿವರ ಪುತ್ರರಾದ ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ, ನಗರಸಭೆಯ ಒಂದನೇ ವಾರ್ಡ್ ವ್ಯಾಪ್ತಿಯಲ್ಲಿ ಬಿ.ಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸಿದ್ದಾರೆ.
ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ಹೀಗಾಗಿ ನೋಟಿಸ್ ತಲುಪಿದ ಏಳು ದಿನಗಳ ಒಳಗಾಗಿ ಆಸ್ತಿ ಸಂಖ್ಯೆ 644 ಮತ್ತು 430 ರಲ್ಲಿ ಒತ್ತುವರಿ ಜಾಗವನ್ನು ಕೂಡಲೇ ತೆರವುಗೊಳಿಸಬೇಕು ಅಥವಾ ಕಟ್ಟಡಕ್ಕೆ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳನ್ನು ನಗರಸಭೆಗೆ ಹಾಜರು ಪಡಿಸಬೇಕು.
ಇಲ್ಲವಾದಲ್ಲಿ ನಿಯಮ ಬಾಹಿರವಾಗಿ 6 ಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕಟ್ಟಡ ಭಾಗವನ್ನು ತೆರವುಗೊಳಿಸಿ ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡ ಮಾಲೀಕರಿಂದ ವಸೂಲಿ ಮಾಡಲಾಗುವುದು ಎಂದು ನಗರಸಭೆ ಆಯುಕ್ತರು ಎಚ್ಚರಿಸಿದ್ದಾರೆ.