ಹಾಸನ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ದೇವೇಗೌಡ ಅವರು ಕೋವಿಡ್ ಕಾಯಿಲೆಯಿಂದ ಬೇಗ ಚೇತರಿಸಿಕೊಳ್ಳಲಿ ಎಂದು ಜಿಲ್ಲಾ ಜೆಡಿಎಸ್ ವತಿಯಿಂದ ಶುಕ್ರವಾರ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.
ನಗರದ ನೀರು ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ, ಈಡುಗಾಯಿ ಒಡೆದರು. ಬಳಿಕ ಅಜಾದ್ ರಸ್ತೆಯಲ್ಲಿರುವ ಮಸೀದಿಯಲ್ಲಿ ದೇವೇಗೌಡ ದಂಪತಿ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ ಮಾತನಾಡಿ, ‘ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಂಪತಿ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ಧೇವೆ. ದೇವೇಗೌಡರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಚಿವರಾಗಿ, ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ ನಾಡಿನ ಜನರಿಗೆ ಹಾಗೂ ರೈತರಿಗೆ ಕೊಡುಗೆ ನೀಡಿದ್ದಾರೆ. ಆರೋಗ್ಯದಲ್ಲಿ ಬೇಗ ಚೇತರಿಸಿಕೊಂಡು ಮತ್ತಷ್ಟು ಸೇವೆ ಸಲ್ಲಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದೇವೆ’ ಎಂದರು.