ಪರಿಶಿಷ್ಟ ಜಾತಿ ಕುಟುಂಬಕ್ಕೆ ರಕ್ಷಣೆ ನೀಡಿ

ಹಾಸನ: ತಾಲ್ಲೂಕಿನ ತೇಜೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
‘ಗ್ರಾಮದಲ್ಲಿ ‘ಮಹಾನಾಯಕ’ ಧಾರಾವಾಹಿ ಫ್ಲೆಕ್ಸ್ ಹಾಕಲು ಒಕ್ಕಲಿಗ ಸಮುದಾಯದವರು ವಿರೋಧ ಮಾಡಿದ್ದಾರೆ.
ವೀರಾಂಜನೇಯ ದೇವಾಲಯ ಪ್ರವೇಶಕ್ಕೆ ಹಾಗೂ ಅಂಬೇಡ್ಕರ್ ಭವನ ನಿರ್ಮಾಣಕ್ಕೂ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜಿಲ್ಲಾಡಳಿತಕ್ಕೆ ಬ್ಯಾನರ್ ಕಟ್ಟಲು ಮತ್ತು ದೇವಾಲಯ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದೆ. ಎಸ್ಸಿ ಸಮುದಾಯ ವಾಸವಿರುವ ಜಾಗದಲ್ಲಿದ್ದ ನಲ್ಲಿಗಳನ್ನು ಮುರಿದು ಹಾಕಿ ದಾಂದಲೆ ನಡೆಸಲಾಗಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.
‘ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಘಟನೆ ನಡೆದಿರುವುದರಿಂದ ಸೂಕ್ತ ರಕ್ಷಣೆ ನೀಡಬೇಕು ಮತ್ತು ಶಾಂತಿಸಭೆ
ನಡೆಸಬೇಕು. ಆಯಾ ಕಟ್ಟಿನ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಪೊಲೀಸ್ ಬಂದೋ ಬಸ್ತ್ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
‘ಈಗಾಗಲೇ ಗ್ರಾಮಕ್ಕೆ ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿ, ‘ಗ್ರಾಮದಲ್ಲಿ ಗುರುವಾರ ಶಾಂತಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು’ ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಚ್.ಕೆ. ಸಂದೇಶ್, ಕೃಷ್ಣದಾಸ್, ಶಂಕರ್ ರಾಜ್,
ವಿಜಯಕುಮಾರ್, ರಮೇಶ್, ಕುಮಾರಸ್ವಾಮಿ ಹಾಗೂ ತೇಜೂರು ಗ್ರಾಮಸ್ಥರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.