ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಈಡುಗಾಯಿ ಒಡೆದು, ಕೊಬ್ಬರಿ ಸುರಿದು ಆಕ್ರೋಶ

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ, ಜೆಡಿಎಸ್ ಮುಖಂಡರ ಪ್ರತಿಭಟನೆ
Published 2 ಡಿಸೆಂಬರ್ 2023, 13:19 IST
Last Updated 2 ಡಿಸೆಂಬರ್ 2023, 13:19 IST
ಅಕ್ಷರ ಗಾತ್ರ

ಹಾಸನ: ಸಂಕಷ್ಟಕ್ಕೆ ಈಡಾಗಿರುವ ತೆಂಗು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಬೇಕು. ಕೂಡಲೇ ಕೊಬ್ಬರಿ ಹಾಗೂ ತೆಂಗಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಕರ್ತರು ಹಾಗೂ ಮುಖಂಡರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಎದುರಿನಲ್ಲಿ ಕೆಲಕಾಲ ಧರಣಿ ನಡೆಸಿದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು, ಎನ್.ಆರ್. ಸರ್ಕಲ್ ಮೂಲಕ ದಾರಿಯುದ್ದಕ್ಕು ಈಡುಗಾಯಿ ಒಡೆಯುತ್ತ ಮೆರವಣಿಗೆಯಲ್ಲಿ ಸಾಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಕೊಬ್ಬರಿ ಹಾಗೂ ತೆಂಗಿನ ರಾಶಿಯನ್ನು ಸುರಿದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ. ರೇವಣ್ಣ, ಜಿಲ್ಲೆಯಲ್ಲಿ ಸುಮಾರು 1.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದೆ. ಮುಖ್ಯವಾಗಿ ಹೊಳೆನರಸಿಪುರ, ಚನ್ನರಾಯಪಟ್ಟಣ, ಅರಸೀಕೆರೆ, ಅರಕಲಗೂಡು ಭಾಗದಲ್ಲಿ ತೆಂಗು ಬೆಳೆಯನ್ನೇ ಆಶ್ರಯಿಸಿರುವ ರೈತರು ಹೆಚ್ಚುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸುಮಾರು ನಾಲ್ಕು ಲಕ್ಷ ಎಕರೆಯಲ್ಲಿ ಬೆಳೆ ನಷ್ಟವಾಗಿದ್ದು, ಕಂದಾಯ ಹಾಗೂ ಕೃಷಿ ಇಲಾಖೆ ಸಮೀಕ್ಷೆಯಲ್ಲಿ ಎನ್‌ಡಿಆರ್‌ಎಫ್ ಮಾನದಂಡದಂತೆ ₹ 131 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿ ನೀಡಿದ್ದಾರೆ. ಆದರೆ ಇದುವರೆಗೂ ರಾಜ್ಯ ಸರ್ಕಾರ ಬೆಳೆ ಪರಿಹಾರ ಬಿಡುಗಡೆ ಮಾಡಿಲ್ಲ. ಸಂಕಷ್ಟಕ್ಕೆ ಗುರಿಯಾಗಿರುವ ರೈತರಿಗೆ ನೆರವಾಗಲು ಖಾಸಗಿ ಸಹಕಾರ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು .

ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಕೊಬ್ಬರಿಗೆ ಹಾಗೂ ತೆಂಗಿಗೆ ಉತ್ತಮ ಬೆಲೆ ಸಿಗದೇ ರೈತರು ನಷ್ಟ ಅನುಭವಿಸುವಂತಾಗಿದೆ. ಕೊಬ್ಬರಿ ಕ್ವಿಂಟಲ್‌ಗೆ ₹ 7 ಸಾವಿರದವರೆಗೆ ಮಾರಾಟವಾಗುತ್ತಿದೆ. ತೆಂಗಿನ ಕಾಯಿ ₹ 10 ರಿಂದ ₹11 ರಂತೆ ಮಾರಾಟವಾಗುತ್ತಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಹೇಳಿದರು.

ರೋಗಬಾಧೆಯಿಂದ ತೆಂಗು ಇಳುವರಿಯು ಕಡಿಮೆಯಾಗಿದ್ದು, 100 ತೆಂಗಿನ ಗಿಡಕ್ಕೆ 10ಸಾವಿರ ತೆಂಗಿನ ಕಾಯಿ ಇಳುವರಿ ಪಡೆಯುತ್ತಿದ್ದ ರೈತರು, ಇಂದು ಕೇವಲ 5ಸಾವಿರ ತೆಂಗಿನಕಾಯಿ ಇಳುವರಿ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ತೋರಿಸಿ ಮಾತನಾಡುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಕಳೆದ ವರ್ಷ 54 ಸಾವಿರ ಟನ್ ಕೊಬ್ಬರಿಯನ್ನು ಖರೀದಿ ಕೇಂದ್ರದ ಮೂಲಕ ಖರೀದಿಸಲಾಗಿತ್ತು. ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಕೇಂದ್ರಕ್ಕೆ ತೆರಳಿ ಬೆಂಬಲ ಬೆಲೆ ಒದಗಿಸುವ ನಿಟ್ಟಿನಲ್ಲಿ ಮನವಿ ಮಾಡಲಾಗುವುದು, ರಾಜ್ಯ ಸರ್ಕಾರ ಸಹ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಚುನಾವಣೆ ಪೂರ್ವ ನೀಡಿದ ಆಶ್ವಾಸನೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಸ್ವರೂಪ್ ಪ್ರಕಾಶ್, ಮಾಜಿ ಶಾಸಕ ಕೆ.ಎಸ್ ಲಿಂಗೇಶ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದೇವೇಗೌಡ, ಜಯರಾಮ್, ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಪರಮ ದೇವರಾಜೇಗೌಡ, ಶಂಕರ್, ಸಮೀರ ಅಹ್ಮದ್, ಮಂಜೇಗೌಡ, ವಾಸುದೇವ್, ಹೊಂಗೆರೆ ರಘು ಭಾಗವಹಿಸಿದ್ದರು.

ಚುನಾವಣೆಯಲ್ಲಿ ನಿರತ ಸರ್ಕಾರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ. ಪಶುಗಳಿಗೆ ಮೇವಿನ ಕೊರತೆಯು ಹೆಚ್ಚಾಗುತ್ತಿದ್ದು ಕಾಯಿಲೆಯಿಂದ ಬಳಲುತ್ತಿರುವ ಪಶುಗಳಿಗೆ ಔಷಧಿ ವಿತರಣೆ ಆಗಬೇಕು. ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣೆಯಲ್ಲಿ ನಿರತವಾಗಿದ್ದು ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಎಚ್‌.ಡಿ. ರೇವಣ್ಣ ಆರೋಪಿಸಿದರು. ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರು ಕ್ವಿಂಟಲ್ ಕೊಬ್ಬರಿಗೆ ₹ 15ಸಾವಿರದಿಂದ ₹ 18ಸಾವಿರ ಬೆಂಬಲ ಬೆಲೆ ಘೋಷಣೆ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಇದೀಗ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಕೇವಲ ಪೊಳ್ಳು ಭರವಸೆಯನ್ನು ನೀಡುತ್ತಿದ್ದು ರೈತರಿಗೆ ಬೆಳೆ ಪರಿಹಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ನಾಫೆಡ್‌ ಕೇಂದ್ರ ತೆರೆಯುವ ಮೂಲಕ ಖರೀದಿಗೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT