ಬೇಲೂರು: ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಶನಿವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಲಾಯಿತು.
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಜಿಲ್ಲೆಯ ಜನರು ತಲೆ ತಗ್ಗಿಸುವಂತಾಗಿದೆ. ಈ ರೀತಿಯ ಹೀನ ಕೃತ್ಯ ಮಾಡಿರುವವರು ನಮ್ಮ ಜಿಲ್ಲೆಯ ಸಂಸದ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ. ಹಾಸನ ಜಿಲ್ಲೆ ಹಾಗೂ ಅವರ ಕುಟುಂಬಕ್ಕೆ ದೊಡ್ಡ ಕಳಂಕ ತಂದಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಸೈಯದ್ ತೌಫಿಕ್ ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತಂದಿದ್ದ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಸನದ ಹೆಸರನ್ನು ಹಾಳು ಮಾಡಿದ್ದಾರೆ. ಮಹಿಳೆಯರಿಗೆ ಗೌರವ ಕೊಡಬೇಕು. ರಾಜಕಾರಣದಲ್ಲಿ ಮೀಸಲಾತಿ ನೀಡಬೇಕು ಎಂಬ ಹೋರಾಟ ದೇಶದಲ್ಲಿ ನಡೆಯುತ್ತಿದೆ. ಆದರೆ ಇಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರು ರಾಜಕಾರಣಕ್ಕೆ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಎಸ್ಐಟಿ ತಂಡ ಬಂಧಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷೆ ತೀರ್ಥಕುಮಾರಿ ಮಾತನಾಡಿದರು. ಶೇಕ್ ಅಬ್ದುಲ್ಲ, ಆನಂದ್, ಉಮಾ (ಮುದ್ದಮ್ಮ), ಜಿ.ಶಾಂತಕುಮಾರ್, ರತ್ನ, ಅಶೋಕ್, ಇಂದ್ರೇಶ್, ಬಿಕ್ಕೊಡು ಚೇತನ್, ಸೌಮ್ಯ ಆನಂದ್, ಸತ್ಯನಾರಾಯಣ್, ಚಂದ್ರಶೇಖರ್ ಇದ್ದರು.