ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಖಾಸಗೀಕರಣ ಕೈ ಬಿಡಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸಿಐಟಿಯು ಮನವಿ
Last Updated 17 ಜುಲೈ 2020, 13:43 IST
ಅಕ್ಷರ ಗಾತ್ರ

ಹಾಸನ: ರೈಲ್ವೆ ಖಾಸಗೀಕರಣ ಕೈ ಬಿಡುವಂತೆ ಆಗ್ರಹಿಸಿ ‘ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌’ (ಸಿಐಟಿಯು) ಕಾರ್ಯಕರ್ತರು ಶುಕ್ರವಾರ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.

ಕೊರೊನಾ ಲಾಕ್‌ಡೌನ್‌ನಿಂದಾಗಿ ನಾಲ್ಕು ತಿಂಗಳಿಂದ ದೇಶದ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಸಂಪತ್ತುಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುವ ಕೆಲಸಕ್ಕೆ ಕೈಹಾಕಿರುವುದು ಸರಿಯಲ್ಲ. ಜಗತ್ತಿನಲ್ಲೇ ಅತಿದೊಡ್ಡ ಸಂಪರ್ಕ ಜಾಲ ಹೊಂದಿರುವ ಭಾರತೀಯ ರೈಲ್ವೆಯನ್ನು ತುಂಡರಸಿ ಖಾಸಗೀಕರಣ ಮಾಡಲು ಕೇಂದ್ರ ತೀರ್ಮಾನಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೈಲ್ವೆ ಖಾಸಗೀಕರಣಗೊಂಡರೆ ಪ್ರಯಾಣಿಕರಿಗೆ ಸಿಗುತ್ತಿದ್ದ ಶೇಕಡಾ 43 ರಷ್ಟು ಸಬ್ಸಿಡಿ ರದ್ದಾಗಲಿದೆ. ಹೊರಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಂಡು ಖಾಸಗಿಯವರು ಲಾಭ ಮಾಡಿಕೊಳ್ಳಲಿದ್ದಾರೆ. ಮಹಿಳೆಯರು, ದಲಿತರು, ಅಂಗವಿಕಲರು ಹಾಗೂ ಕ್ರೀಡಾಪಟುಗಳಿಗೆ ನೇಮಕಾತಿಗಳಲ್ಲಿ ಸಿಗುತ್ತಿದ್ದ ಮೀಸಲಾತಿಗಳು ರದ್ದಾಗಲಿವೆ. ಅಲ್ಲದೇ ಸರಕು ಸಾಮಾಗ್ರಿಗಳ ಸಾಗಾಣಿಕೆ ವೆಚ್ಚಗಳು ಏರಿಕೆಯಾಗಲಿವೆ. ಇದರಿಂದ ಕೃಷಿ ಮತ್ತು ಕೈಗಾರಿಕಾ ವಲಯಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

109 ರೈಲು ನಿಲ್ದಾಣಗಳನ್ನು ಖಾಸಗಿಯವರ ನಿರ್ವಹಣೆಗೆ ಒಪ್ಪಿಸಿ, 151 ಖಾಸಗಿ ರೈಲುಗಳನ್ನು ಓಡಿಸುವ ನಿರ್ಧಾರದಿಂದ ಕೇಂದ್ರ ಹಿಂದೆ ಸರಿಯಬೇಕು. ಭಾರತೀಯ ರೈಲ್ವೆ ಭಾರತೀಯರ ಜೀವನಾಡಿ. ಅದನ್ನು ಖಾಸಗಿಯವರ ಕೈಗೆ ಕೊಟ್ಟು ಜನಸಾಮಾನ್ಯ ರಹಿತ ಬಲಿಕೊಡುತ್ತಿರುವುದು ಸರಿಯಲ್ಲ. ಖಾಸಗಿ ರೈಲುಗಳ ಟಿಕೆಟ್‌ ದರ ದುಬಾರಿಯಾಗಿದ್ದು, ಸಾಮಾನ್ಯ ಜನರು ಪ್ರಯಾಣಿಸಲು ಆಗುವುದಿಲ್ಲ. ಅತಿ ಕಡಿಮೆ ದರದಲ್ಲಿ ದೂರದ ಊರುಗಳಿಗೆ ಪ್ರಯಾಣ ಮಾಡಲು, ಸರಕು ಸಾಗಣೆಗೆ ರೈಲುಗಳು ಬಹಳ ಸಹಕಾರಿಯಾಗಿವೆ. ಖಾಸಗೀಕರಣಗೊಂಡರೆ ಎಲ್ಲವೂ ದುಬಾರಿಯಾಗುತ್ತದೆ ಎಂದು ಹೇಳಿದರು.

‘ದೇಶದ ಸಂಪತ್ತು ಮಾರಾಟ ಮಾಡಲು ಸರ್ಕಾರ ಲಾಕ್‌ಡೌನ್‌ ಬಳಸಿಕೊಳ್ಳುತ್ತಿದೆ. ಜನರು ಒಟ್ಟಿಗೆ ಸೇರುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ, ಅಧಿವೇಶನ ನಡೆಸುತ್ತಿಲ್ಲ, ವಿರೋಧ ಪಕ್ಷಗಳ ಚಟುವಟಿಕೆಗೆ ಅವಕಾಶವಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲ ವಿರೋಧ ಹತ್ತಿಕ್ಕಿ ಲಾಭದಾಯಕ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡಲು ಕೇಂದ್ರ ಮುಂದಾಗಿದೆ. ಇದು ಲಕ್ಷಾಂತರ ಮಂದಿ ಉದ್ಯೋಗದ ಪ್ರಶ್ನೆಯಾಗಿದೆ. ದೇಶದ್ರೋಹಿ ಕೆಲಸ ಕೈ ಬಿಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು.

ಬಳಿಕ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿ ಪತ್ರವನ್ನು ಇಲ್ಲಿನ ರೈಲು ನಿಲ್ದಾಣದ ಅಧಿಕಾರಿಗೆ ಅವರಿಗೆ ಸಲ್ಲಿಸಿದರು.ಪ್ರಧಾನ ಕಾರ್ಯದರ್ಶಿಎಂ.ಬಿ. ಪುಷ್ಪ, ಖಜಾಂಚಿ ಜಿ.ಪಿ. ಸತ್ಯನಾರಾಯಣ, ಕಾರ್ಯದರ್ಶಿ ಅರವಿಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT