ನುಗ್ಗೇಹಳ್ಳಿ ಹೋಬಳಿಯ ಗೂಳಿ ಹೊನ್ನೇನಹಳ್ಳಿ ಗ್ರಾಮದ ಸಮೀಪದ ಸೋಮವಾರ ಸಂತೆ ಬಳಿ ₹13.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಉದ್ಘಾಟಿಸಿದರು
ನವೋದಯ ಶಾಲೆಗಳಂತೆ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲೂ ಸಿಬಿಎಸ್ಇ ಪಠ್ಯಕ್ರಮ ಅಳವಡಿಸಿದರೆ ರಾಜ್ಯದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು
ಶ್ರೇಯಸ್ ಎಂ.ಪಟೇಲ್ ಸಂಸದ
‘ಶೇ100 ಫಲಿತಾಂಶ ಬರುವಂತೆ ಕ್ರಮವಹಿಸಿ’
‘ರಾಜ್ಯ ಸರ್ಕಾರ ವಸತಿ ಶಾಲೆಗಳ ಆಧುನಿಕರಣಕ್ಕೆ ಆದ್ಯತೆ ನೀಡುತ್ತಿದ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು ಇದರಿಂದ ಅವರ ಬೌದ್ಧಿಕ ಗುಣಮಟ್ಟ ಕುಸಿಯುತ್ತದೆ. ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊರಾರ್ಜಿ ವಸತಿ ಶಾಲೆ ಸೇರಿದಂತೆ ಎಲ್ಲಾ ವಸತಿ ಶಾಲೆಗಳಲ್ಲೂ 100ಕ್ಕೆ 100ರಷ್ಟು ಫಲಿತಾಂಶ ಬರುವಂತೆ ಕ್ರಮವಹಿಸಬೇಕು’ ಎಂದು ಸಚಿವರು ಸೂಚಿಸಿದರು.
ಇಂದಿರಾಗಾಂಧಿ ವಸತಿ ಶಾಲೆ ನಿರ್ಮಾಣ: ₹20 ಕೋಟಿಗೆ ಮನವಿ
‘ತಾಲ್ಲೂಕಿನಲ್ಲಿ ಇಂದಿರಾಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ₹20 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಒತ್ತಾಯಿಸಲಾಗಿತ್ತು. ಮನವಿಯಂತೆ ಸರ್ಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದು ಶೀಘ್ರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ. ನುಗ್ಗೇಹಳ್ಳಿ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆದಾರರಿಗೆ ಸರ್ಕಾರದಿಂದ ₹3 ಕೋಟಿ ಹಣ ಬಿಡುಗಡೆ ಆಗಬೇಕಾಗಿದೆ. ಈ ಬಗ್ಗೆ ಸಚಿವರು ಹಣ ಬಿಡುಗಡೆಗೆ ಸೂಚಿಸಬೇಕು’ ಎಂದು ಸಿ.ಎನ್.ಬಾಲಕೃಷ್ಣ ಮನವಿ ಮಾಡಿದರು.