ಹಾಸನ: ‘ದೆಹಲಿ ಚಲೊ’ ಧರಣಿ ಬೆಂಬಲಿಸಿ ಹಾಗೂ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಎಐಕೆಎಸ್ಸಿಸಿ ರೈತ, ಕಾರ್ಮಿಕ, ದಲಿತ ಮತ್ತು ಜನಪರಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ರಸ್ತೆತಡೆ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆತಡೆ ನಡೆಸಿದರು.
ಕರ್ನಾಟಕ ಪ್ರಾಂತ ರೈತರ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಜನರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಇಂದು ರೈತರು ಹಾಗೂ ಕಾರ್ಮಿಕರನ್ನು ಕೀಳಾಗಿ ಕಾಣುತ್ತಿದೆ. ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹಲ್ಲೆ ನಡೆಸಿದೆ. ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಬೇಕು. ಜನವಿರೋಧಿ ಹಾಗೂ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ, ಸಿಐಟಿಯು ಕಾರ್ಯದರ್ಶಿ ಅರವಿಂದ್, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಅನೆಕೆರೆ ರವಿ, ರೈತ ಮುಖಂಡ ಬಾಬು ಇದ್ದರು.