ಹಾಸನ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ರಾಜ್ಯ ಖಾಸಗಿ ಶಿಕ್ಷಕರ ಬಳಗದ ವತಿಯಿಂದ ‘ಶಿಕ್ಷಕ ರತ್ನ’ ಪ್ರಶಸ್ತಿಯನ್ನು ರಾಜ್ಯದ 31 ಜಿಲ್ಲೆಯ 35 ಮಂದಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ಅಧ್ಯಕ್ಷ ಸಿ.ಎನ್. ನಾಗೇಶ್ ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೆ.26 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಶಸ್ತಿ ಪ್ರದಾನ ಮಾಡುವರು. ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರಿಗೆ ‘ಆರಕ್ಷಕ ರತ್ನ’ ಬಿರುದು ನೀಡಿ ಸನ್ಮಾನಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಅಂದಾಜು 9 ಸಾವಿರ ಖಾಸಗಿ ಶಾಲಾ, ಕಾಲೇಜುಗಳಿವೆ. 10, 15, 20 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳ ಖಾಸಗಿ ಶಿಕ್ಷಕರು ಹಾಗೂ ಉಪನ್ಯಾಸಕರು ಪಾಲ್ಗೊಳ್ಳುವರು ಎಂದರು.
ಪ್ರಶಸ್ತಿಗೆ ಆಯ್ಕೆ ಮಾಡಲು ಎಲ್ಲಾ ಜಿಲ್ಲೆಗಳಿಂದಲೂ ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದ ನಿವೃತ್ತ ಸರ್ಕಾರಿ ಶಿಕ್ಷಕರು ಅರ್ಜಿಗಳನ್ನು ಪರಿಶೀಲಿಸಿ, ಪ್ರತಿ ಜಿಲ್ಲೆಯಿಂದ ಒಬ್ಬ ಶಿಕ್ಷಕ, ಇಬ್ಬರು ಅನುಭವಿ ಶಿಕ್ಷಕರು ಹಾಗೂ ಒಬ್ಬ ಗಡಿನಾಡಿ ಶಾಲೆ ಕನ್ನಡ ಶಿಕ್ಷಕ ಮತ್ತು ಒಂದು ಪ್ರಶಸ್ತಿಯನ್ನು ವಿಶೇಷ ಪ್ರತಿಭೆಗೆ ನೀಡಲಾಗುತ್ತಿದೆ ಎಂದು ಹೇಳಿದರು.