ಗ್ರಾಮ ಮಟ್ಟದಿಂದ ಪಕ್ಷ ಬಲಪಡಿಸಿ: ಎಎಪಿ ರಾಜ್ಯ ಸಂಚಾಲಕ ರಾಜಶೇಖರ್ ದೊಡ್ಡಣ ಕರೆ

ಹಾಸನ: ಗ್ರಾಮ ಮಟ್ಟದಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಬೇಕು ಎಂದು ಆಮ್ ಆದ್ಮಿ (ಎಎಪಿ) ರಾಜ್ಯ ಸಂಚಾಲಕ ರಾಜಶೇಖರ್ ದೊಡ್ಡಣ ಕರೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಎಎಪಿ (ಆಮ್ ಆದ್ಮಿ) ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಿ, ಪಕ್ಷ ಬಲವರ್ಧನೆ ಮಾಡಬೇಕು. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಿಂದಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಬೇಕು. ಅದಕ್ಕಾಗಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಡೆಯುವ ಭ್ರಷ್ಟಾಚಾರದ ಕುರಿತು ಮಾಹಿತಿ ಸಂಗ್ರಹಿಸಿ, ಹೋರಾಟ ನಡೆಸಬೇಕು. ಜತೆಗೆ ಜನ ಸಾಮಾನ್ಯರ ಸಮಸ್ಯೆಗಳ ಬಗ್ಗೆಯೂ ಧ್ವನಿ ಎತ್ತಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷದ ವಿವಿಧ ವಿಭಾಗಗಳನ್ನು ರಚಿಸಿ ಪದಾಧಿಕಾರಿಗಳನ್ನು ನೇಮಿಸಲಾಗುವುದು ಎಂದರು.
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಸತತ ಎರಡನೇ ಬಾರಿಗೆ ಅಧಿಕಾರದಲ್ಲಿದ್ದು, ಅನೇಕ ಸಾಮಾಜಿಕ ಕೆಲಸಗಳ ಜತೆಗೆ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುವುದರ ಮೂಲಕ ಜನರ ಮನ ಗೆದ್ದಿದೆ ಎಂದು ಹೇಳಿದರು.
ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭ್ರಷ್ಟಾಚಾರ ಮುಕ್ತ, ಸಾಮಾಜಿಕ ನ್ಯಾಯ, ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲಿ ದೆಹಲಿ ಮಾದರಿಯಲ್ಲಿ ಕೆಲಸ ಮಾಡಬೇಕಿದೆ ಎಂದರು.
ಎಎಪಿ ರಾಜ್ಯ ಸಂಚಾಲಕ ಹಾಗೂ ಜಿಲ್ಲಾ ಉಸ್ತುವಾರಿ ವಿಜಯ್ ಕುಮಾರ್, ಜಿಲ್ಲಾ ಸಂಚಾಲಕರಾದ ಕೆ.ಪಿ.ಶಿವಕುಮಾರ್, ಶ್ರೀನಿವಾಸ್, ಪ್ರದೀಪ್ ಠಾಕೂರ್, ರೋಶನ್ ಆಲೂರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.