ಹಾಸನ:ನಗರದಎಂಜಿನಿಯರಿಂಗ್ ಕಾಲೇಜು ಕಟ್ಟಡದದಲ್ಲಿ ನಿರ್ಮಿಸುತ್ತಿರುವ ಸ್ಟ್ರಾಂಗ್ ರೂಂ ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.
ಮತಯಂತ್ರಗಳನ್ನು ಸುರಕ್ಷಿತವಾಗಿಡುವ ಕಟ್ಟಡಕ್ಕೆ ಭೇಟಿ ನೀಡಿ, ಸಲಹೆ, ಸೂಚನೆಗಳನ್ನು ನೀಡಿದ ಅವರು,ಎಲ್ಲಾ ತಾಲ್ಲೂಕುಗಳಲ್ಲಿ ಇಂತಹ ಸುಸಜ್ಜಿತ ಸ್ಟ್ರಾಂಗ್ ರೂಂ ನಿರ್ಮಾಣ ಮಾಡಬೇಕಾಗಿದೆ ಎಂದು ತಿಳಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವಾರು ವಿಷಯ ಚರ್ಚಿಸಿದರು.
ಮತದಾರರ ಗುರುತಿನ ಚೀಟಿಯಲ್ಲಿ ಲೋಪದೋಷವಾಗದಂತೆ ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಇ-ಎಪಿಕ್ ಹೆಚ್ಚು ಬಳಕೆಗೆ ಬರುವುದರಿಂದಗಮನಿಸಬೇಕು ಎಂದ ಅವರು, ಯುವ ಮತದಾರರ ಸೇರ್ಪಡೆ, ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ, ಲಿಂಗಾನುಪಾತ, ಮತ್ತಿತರ ವಿಷಯದ ಬಗ್ಗೆ ಮಾಹಿತಿ ಪಡೆದು ಸಲಹೆ, ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಕೋವಿಡ್ -19 ನಿಂದಾಗಿ ಶಾಲಾ-ಕಾಲೇಜುಗಳು ನಡೆಯದ ಕಾರಣ ಯುವ ಮತದಾರರ ನೋಂದಣಿ ಸ್ವಲ್ಪ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಸೇರ್ಪಡೆ ಮಾಡಲಾಗುವುದು ಎಂದರು.
ಇದಕ್ಕೂ ಮುನ್ನ ಮುಖ್ಯ ಚುನಾವಣಾಧಿಕಾರಿ ಬೇಲೂರು ತಾಲ್ಲೂಕಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿಗಳಾದ ಬಿ.ಎ. ಜಗದೀಶ್, ಗಿರೀಶ್ ನಂದನ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ತಹಶೀಲ್ದಾರ್ ಶಿವಶಂಕರಪ್ಪ ಹಾಜರಿದ್ದರು.