ಹಾಸನ: ‘ಹೊಳೆನರಸೀಪುರ ಪುರಸಭೆಯ ಎಲ್ಲಾ ಸದಸ್ಯರು ಒಗ್ಗಟ್ಟಾಗಿದ್ದೇವೆ. ಯಾವುದೇ ಭಿನ್ನಾಭಿಪ್ರಾಯ ಅಥವಾ ಅಸಮಾಧಾನ ಇಲ್ಲ’ ಎಂದು ಪುರಸಭೆ ಅಧ್ಯಕ್ಷೆ ವೀಣಾ ರಾಜೇಶ್ ಸ್ಪಷ್ಟಪಡಿಸಿದರು.
‘ಜೆಡಿಎಸ್ನಿಂದ ಚುನಾಯಿತ ರಾಗಿರುವ 23 ಸದಸ್ಯರು ಒಟ್ಟಾಗಿಯೇ ಇದ್ದೇವೆ. ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ನಾಯಕ ಎಚ್.ಡಿ.ರೇವಣ್ಣ ಅವರ ಸಲಹೆ, ಸಹಕಾರದಿಂದಲೇ ಪಟ್ಟಣದ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಡಿ.10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ. ಆರ್.ಸೂರಜ್ ಅವರನ್ನೇ ಬೆಂಬಲಿಸಲಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ.ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಮಾರ್ಗದರ್ಶನದಲ್ಲಿ ಪಟ್ಟಣದ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತೇವೆ’ ಎಂದರು.