ಹಾಸನ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 78 ಮನೆಗಳು ಭಾಗಶಃ ಹಾಗೂ 6 ಮನೆಗಳು ಸಂಪೂರ್ಣ ಹಾನಿಯಾಗಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಶನಿವಾರ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ಪ್ರಜ್ವಲ್ ರೇವಣ್ಣಅವರೊಂದಿಗೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 50 ಸೇತುವೆಗಳು 374 ವಿದ್ಯುತ್ ಕಂಬಗಳು ಹಾನಿಯಾಗಿವೆ. ಐದು ಜಾನುವಾರುಗಳು ಮೃತಪಟ್ಟಿದ್ದು,ತಕ್ಷಣ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದರು.
ಭೂ ಕುಸಿತ ಮತ್ತಿತರ ಸ್ವರೂಪದ ಹಾನಿಯಾಗುವ ಸಾಧ್ಯತೆ ಇರುವ 95 ಗ್ರಾಮಗಳನ್ನು ಗುರುತಿಸಿ ಮುಂಜಾಗ್ರತೆ ವಹಿಸಲಾಗಿದೆ. 25 ಗ್ರಾಮಗಳನ್ನು ಸ್ಥಳಾಂತರಿಸಲು ಹಾಗೂ ಅಗತ್ಯವಿರುವ ಕಡೆತಾತ್ಕಾಲಿಕ ಆಶ್ರಯ ಕೇಂದ್ರ ಪ್ರಾರಂಭಿಸಿ ಆಹಾರ ಹೊದಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೀಡಲುಸೂಚಿಸಲಾಗಿದೆ. ಸಂಪೂರ್ಣವಾಗಿ ಹಾನಿಯಾಗಿದ್ದಲ್ಲಿ ಉಚಿತ ಮನೆ ನಿರ್ಮಿಸಿ ಕೊಡಲು ಕ್ರಮವಹಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ದೋಣಿಗಾಲ್ ಬಳಿಯ ಭೂ ಕುಸಿತವಾಗಿರುವ ರಸ್ತೆಯನ್ನು ಶೀಘ್ರ ದುರಸ್ತಿ ಪಡಿಸುವಂತೆ ಸೂಚಿಸಲಾಗಿದೆ. ಮಂಗಳೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಇದ್ದಾಗಿರುವುದರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವವರೆಗೂ ಬೆಳಗಿನ ವೇಳೆ ಲಘು ವಾಹನಗಳ ಸಂಚಾರಕ್ಕೆ ಮಾತ್ರಅವಕಾಶವನ್ನು ನೀಡಲು ಸೂಚಿಸಲಾಗಿದೆ. ಇತರೆ ವಾಹನಗಳಿಗೆ ಬದಲಿ ರಸ್ತೆಮಾರ್ಗದ ವ್ಯವಸ್ಥೆಕಲ್ಪಿಸಲಾಗಿದೆ ಎಂದು ಹೇಳಿದರು.
‘ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ.ಜೊತೆಗೆ ಕಾಂಕ್ರಿಟ್ ತಡೆಗೋಡೆ ನಿರ್ಮಿಸಿ ಶಾಶ್ವತವಾಗಿ ನಾಲ್ಕುಪಥದ ರಸ್ತೆಯನ್ನು ನಿರ್ಮಾಣಮಾಡಲಾಗುವುದು. ಭೂಕುಸಿತದಿಂದ ಉಂಟಾಗಿರುವ ಜಮೀನು ಹಾನಿ ಮತ್ತು ಬೆಳೆ ಹಾನಿಗೆಕಂದಾಯ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ನಿಧಿಯಿಂದ ಪರಿಹಾರ ನೀಡಲಾಗುವುದು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ರಜೆಗೆಅವಕಾಶ ನೀಡುವಂತಿಲ್ಲ ಎಂದರು.
ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಅನೆ ಹಾವಳಿ ನಿಯಂತ್ರಣ ಮತ್ತಿತರ ಸ್ಥಳೀಯ ಸಮಸ್ಯೆಗಳಕುರಿತು ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು 15 ದಿನದೊಳಗೆ ಸಭೆನಡೆಸಲಾಗುವುದು ಎಂದರು.
ಸಚಿವ ಕೆ.ಗೋಪಾಲಯ್ಯ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿಯನ್ನುತ್ವರಿತವಾಗಿ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಮಳೆಯಿಂದ ಹಾನಿಯಾಗಿರುವಮನೆಗಳನ್ನು ಗುರುತಿಸಿ ಪರಿಹಾರ ನೀಡುವ ಕಾರ್ಯವನ್ನು ಜಿಲ್ಲಾಧಿಕಾರಿ ಮಾಡುತ್ತಿದ್ದಾರೆ ಎಂದುಅವರು ಹೇಳಿದರು.
ಇದೇ ವೇಳೆ ಪ್ರಜ್ವಲ್ ರೇವಣ್ಣ ಸಹ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ,ತುರ್ತಾಗಿ ರಸ್ತೆ ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಬೆಳೆ ಹಾನಿಗೆ ರಾಜ್ಯಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ಎಚ್.ಕೆ ಕುಮಾರಸ್ವಾಮಿ ಸಹ ತುರ್ತಾಗಿ ದುರಸ್ತಿ ಕಾಮಾಗಾರಿ ನಡೆಸಿ, ಶೀಘ್ರಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್, ಪೋಲಿಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸಗೌಡ ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿಪ್ರತೀಕ್ , ತಹಶೀಲ್ದಾರ್ ಜೈಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.