ಆಲೂರು (ಹಾಸನ): ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಭಾನುವಾರ ರಾತ್ರಿ ಕೆಲ ವಿದ್ಯಾರ್ಥಿಗಳಿಗೆ ವಾಂತಿಯಾಗಿದ್ದು, 25 ವಿದ್ಯಾರ್ಥಿಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
200 ವಿದ್ಯಾರ್ಥಿಗಳ ಪೈಕಿ ಒಂದು ಕೋಣೆಯಲ್ಲಿದ್ದ 25 ಮಕ್ಕಳಿಗೆ ಮಾತ್ರ ವಾಂತಿ ಆಗಿದೆ. ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಂದೇ ಕೋಣೆಯಲ್ಲಿದ್ದ ವಿದ್ಯಾರ್ಥಿಗಳಲ್ಲಿ ವಾಂತಿಯಾಗಿದ್ದು, ಈ ಎಲ್ಲ ವಿದ್ಯಾರ್ಥಿಗಳು ಹೊರಗಿನಿಂದ ತಂದ ಆಹಾರ ಸೇವಿಸಿರುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಚೇತರಿಸಿಕೊಂಡ ನಂತರ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.