ಹಾಸನ: ಶ್ರಾವಣ ಮಾಸದ ಎರಡನೇ ಶುಕ್ರವಾರ ವರಮಹಾಲಕ್ಷ್ಮಿ ಪೂಜೆಯನ್ನು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಶ್ರದ್ಧೆ, ಭಕ್ತಿಯಿಂದ ಪೂಜೆ ನೆರವೇರಿಸಿದರು.
ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಹಬ್ಬಕ್ಕೆ ಮುಂಚಿತವಾಗಿಯೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಮನೆಗಳಲ್ಲಿ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿದರು. ಹಬ್ಬದ ಪ್ರಯುಕ್ತ ಕೆಲವರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು.
ನಗರದ ರಿಂಗ್ ರಸ್ತೆಯ ಚಾಮುಂಡೇಶ್ವರಿ ದೇವಾಲಯ, ಕೆ.ಆರ್.ಪುರಂ ಈಶ್ವರ ಹಾಗೂ ಗಣಪತಿ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ದೇವರಿಗೆ ವಿಶೇಷ ಅಲಂಕಾರ ಮಾಡಿ, ರುದ್ರಾಭಿಷೇಕ, ವಿಶೇಷ ಹೂವಿನ ಅಲಂಕಾರ, ಕುಂಕುಮ ಆರ್ಚನೆ ನರೆವೇರಿಸಲಾಯಿತು.
ಹಬ್ಬ ಆಚರಣೆಗಾಗಿ ಮಹಿಳೆಯರು ಬೆಳಿಗ್ಗೆಯಿಂದಲೇ ದೇವಿಯನ್ನು ಪ್ರತಿಷ್ಠಾಪಿಸಿ, ಹೂವು, ಹಣ್ಣು, ಆಭರಣಗಳಿಂದ ಅಲಂಕರಿಸಿ, ಹೊಸ ಉಡುಪುಗಳಿಂದ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.
ಮಹಿಳೆಯರು ಹಾಗೂ ಮಕ್ಕಳು ಹೊಸ ಉಡುಪುಗಳನ್ನು ತೊಟ್ಟು ,ಮನೆಯಲ್ಲಿ ಸುಖ-ಶಾಂತಿ-ನೆಮ್ಮದಿ ಹಾಗೂ ಸಕಲ ಐಶ್ವರ್ಯ ನೆಲೆಸುವಂತೆ ವರ ಮಹಾಲಕ್ಷ್ಮಿಯನ್ನು ಪ್ರಾರ್ಥಿಸಿದರು. ವರಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿದ ಮಹಿಳೆಯರು, ಸುಮಂಗಲಿಯರಿಗೆ ಅರಿಶಿಣ-ಕುಂಕುಮ, ಕಣವನ್ನು ನೀಡಿ ಪ್ರಾರ್ಥಿಸಿದರು.