ಹಾಸನ: ಜಾನುವಾರುಗಳು ಕಾಯಿಲೆಗೆ ತುತ್ತಾದಾಗ ಕರೆ ಮಾಡಿದರೆ ಪಶು ಸಂಜೀವಿನಿ ವಾಹನ ರೈತರ ಮನೆ ಬಾಗಿಲಿಗೆ ಬಂದು ಚಿಕಿತ್ಸೆ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪಶು ಸಂಗೋಪನಾ ಇಲಾಖೆಯ ವತಿಯಿಂದ ಒದಗಿಸಿರುವ ‘ಪಶು ಸಂಜೀವಿನಿ’ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಬಳಿಕ ಮಾತನಾಡಿದರು.
200 ಕೆ.ಜಿ ಗೆ ಒಳಪಟ್ಟ ಜಾನುವಾರುಗಳಿಗೆ ಈ ವಾಹನದಲ್ಲಿಯೇ ಶಸ್ತ್ರ ಚಿಕಿತ್ಸೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ರೈತರಿಗೆ ಪಶು ಸಂಜೀವಿನಿ ವಾಹನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಪಶು ಸಂಜೀವಿನಿ ಮಾಹಿತಿ ಕುರಿತ ಬಿತ್ತಿ ಪತ್ರ ಮುದ್ರಿಸಿ ಸಾರ್ವಜನಿಕರಿಗೆ ಹಂಚುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ದವಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಶಿಕ್ಷೆ ಖಚಿತ. ಯಾವುದೇ ಒತ್ತಡ ಬಂದರೂ ಹಿಂದೆ ಸರಿಯುವ ಮಾತಿಲ್ಲ ಎಂದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಕೋವಿಡ್ ರೋಗಿಗಳಿಂದ ಹೆಚ್ಚು ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಹೆಚ್ಚು ಹಣ ವಸೂಲಿ ಮಾಡುವುದು ಗಮನಕ್ಕೆ ಬಂದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯತಿ ಸಿಇಒ ಬಿ.ಎ ಪರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ನವೀನ್ ಭಟ್, ಪಶು ವೈದ್ಯ ಅಧಿಕಾರಿ ಡಾ. ನಿತೀಶ್ ಇದ್ದರು.