ಹಾಸನ: ಜಿಲ್ಲೆಯಲ್ಲಿ ಐಐಟಿಗಿಂತಲೂ ಗುಣಮಟ್ಟದ ಶಿಕ್ಷಣ ನೀಡುವ ವಿಶ್ವಮಟ್ಟದ ಕ್ಯಾಂಪಸ್ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ‘ಜಿಲ್ಲೆಗೆ ಐಐಟಿ ತರಬೇಕೆಂಬುದು ಸಂಸದ ಎಚ್.ಡಿ.ದೇವೇಗೌಡರ ಕನಸಾಗಿತ್ತು. 2006ರಲ್ಲಿಯೇ ಭೂಮಿ ಸ್ವಾಧೀನಪಡಿಸಿಕೊಂಡು ಮೀಸಲಿರಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಸಚಿವ ರೇವಣ್ಣ ಆಸಕ್ತಿ ವಹಿಸಿ ಜಿಲ್ಲೆಗೆ ತಾಂತ್ರಿಕ ವಿಶ್ವವಿದ್ಯಾಲಯ ಮಂಜೂರು ಮಾಡಿಸಿದ್ದಾರೆ. ಆದರೆ ಉತ್ತರ ಕರ್ನಾಟಕ ಭಾಗದವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನೇ ವಿಭಜನೆ ಮಾಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಎಂಜಿನಿಯರಿಂಗ್ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕಿದೆ. ರಾಜ್ಯದ ಸಮಗ್ರ ಅಭಿವೃದ್ಧಿಯೇ ಮೈತ್ರಿ ಸರ್ಕಾರದ ಆಶಯ ಎಂದರು.
ಹಳೆ ಜಿಲ್ಲಾ ಆಸ್ಪತ್ರೆಯ ಉತ್ತರ ಭಾಗಕ್ಕೆ ಇರುವ ಹೆರಿಗೆ ಮತ್ತು ಮಕ್ಕಳ ವಿಭಾಗ, ನವಜಾತ ಶಿಶು ಆಸತ್ರೆ ವಿಭಾಗಗಳಿರುವ ಕಟ್ಟಡದ ನೆಲಮಾಳಿಗೆಯ ಮೇಲೆ ಒಂದು ಅಂತಸ್ತಿನ ಕಟ್ಟಡ ನಿರ್ಮಾಣ (₹ 9.95 ಕೋಟಿ), ಹಿಮ್ಸ್ ಸಂಸ್ಥೆಯ ಹಳೆ ಜಿಲ್ಲಾ ಆಸ್ಪತ್ರೆಯ ದಕ್ಷಿಣ ಭಾಗದಲ್ಲಿರುವ ಕಟ್ಟಡ ನೆಲಸಮಗೊಳಿಸಿ, ಆ ಜಾಗದಲ್ಲಿ 450 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣ (₹ 99 ಕೋಟಿ) ಕಾಮಗಾರಿ, ಲೋಕೋಪಯೋಗಿ ಇಲಾಖೆಯಿಂದ ಗಂಧದಕೋಠಿ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ₹ 50 ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸಚಿವ ಎಚ್.ಡಿ.ರೇವಣ್ಣ, ಶಾಸಕರಾದ ಎ.ಟಿ.ರಾಮಸ್ವಾಮಿ, ಎಚ್.ಕೆ.ಕುಮಾರ್ ಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್.ಲಿಂಗೇಶ್, ಸಂಸದಿಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ, ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್ ಇದ್ದರು.