ಹಾವೇರಿ: ‘ಶಿಗ್ಗಾವಿ– ಸವಣೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 39 ರಸ್ತೆಗಳ ಸುಧಾರಣೆ ಕಾಮಗಾರಿಗಳಿಗೆ ಕರ್ನಾಟಕ ನೀರಾವರಿ ನಿಗಮದಿಂದ ₹30 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬರುವ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರಗಳ ರಸ್ತೆಗಳು ಮಳೆಯಿಂದ ಹಾಳಾಗಿವೆ. ಹೀಗಾಗಿ ರಸ್ತೆ ಸುಧಾರಣೆ ಅವಶ್ಯವಿದ್ದು ಶಿಗ್ಗಾವಿ ಏತ ನೀರಾವರಿ ಹಾಗೂ ಸವಣೂರು ಏತ ನೀರಾವರಿ ಪರಿಷ್ಕೃತ ಯೋಜನೆ ಅಳವಡಿಸಿಕೊಂಡು ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಲ್ಲಿಮನವಿ ಮಾಡಲಾಗಿತ್ತು.
ಕೋರಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೂಡಲೇ ಹಣಕಾಸು ಇಲಾಖೆ ಒಪ್ಪಿಗೆಯೊಂದಿಗೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರಿಗೆ ನಿರ್ದೇಶನ ನೀಡಿ, ಕರ್ನಾಟಕ ನೀರಾವರಿ ನಿಗಮದಿಂದ ಕೂಡಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಿದ್ದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ದೇಶದಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುವುದು ಮತ್ತು ರಸ್ತೆ ಮೂಲಸೌಕರ್ಯ ಸುಧಾರಣೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.