ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ, ರಾಜ್ಯದಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ, ಅನಿರ್ದಿಷ್ಟ ಅವಧಿಯವರೆಗೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈಗಾಗಲೇ ರಾಜ್ಯದ ಪಂಚಾಯ್ತಿ ಕಚೇರಿಗಳ ಮುಂದೆ ಪ್ರತಿಭಟನೆ, ಜಿಲ್ಲಾ, ತಾಲ್ಲೂಕು, ಪಟ್ಟಣ ಕೇಂದ್ರಗಳಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ, ಮುಖ್ಯಮಂತ್ರಿಗೆ ಪತ್ರ ಬರೆಯುವ ‘ಪತ್ರ ಚಳವಳಿ’ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂಭಾಗ ಧರಣಿ ನಡೆಸಿದ್ದಾರೆ.
ಅದರ ಮುಂದುವರಿದ ಭಾಗವಾಗಿ ಶುಕ್ರವಾರ ತಮ್ಮ ಮನೆಯ ಸದಸ್ಯರೊಂದಿಗೆ ಬೇಡಿಕೆಯ ಪೋಸ್ಟರ್ ಪ್ರದರ್ಶಿಸಿ, ಅವುಗಳ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ವಿನೂತನವಾಗಿ ಧರಣಿ ನಡೆಸಿದರು. ಜಿಲ್ಲೆಯಾದ್ಯಂತ ಇರುವ ಆಶಾ ಕಾರ್ಯಕರ್ತೆಯರು ತಮ್ಮ ಮನೆಗಳಿಂದಲೇ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಎಂದು ಜಿಲ್ಲಾ ಘಟಕದ ಅಧ್ಯಕ್ಷೆ ಜಯಶೀಲಾ ಬಂಕಾಪುರಮಠ ತಿಳಿಸಿದರು.