ಹಾವೇರಿ: ‘ತುಮಕೂರಿನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರು ನಡೆಸುತ್ತಿರುವ ಸಭೆಗೆ ನುಗ್ಗಿ ದಾಂಧಲೆ ನಡೆಸಿರುವುದು ಖಂಡನೀಯ. ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ನಮಗೆ ಅವಕಾಶ ಇದೆ. ಅದನ್ನು ಬಿಟ್ಟು ಕನ್ನಡಿಗರ ಹೆಮ್ಮೆಯ ದೇವೇಗೌಡರ ಸಭೆಯಲ್ಲಿ ಆ ರೀತಿ ದಾಂಧಲೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ. ಜನರು ಎಲ್ಲವನ್ನೂ ನೋಡುತ್ತಾರೆ. ವಿಶೇಷವಾಗಿ ದೇವೇಗೌಡರು ಕನ್ನಡದ ಸಲುವಾಗಿ ಕನ್ನಡಿಗರಿಗಾಗಿ ಪಕ್ಷಭೇದ ಮರೆತು ಹೋರಾಟ ಮಾಡಿದ್ದಾರೆ’ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ನ ಅನೇಕ ನಾಯಕರು ಮಹಿಳೆಯರ ಬಗ್ಗೆ ಸಾಕಷ್ಟು ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾದಿ ರಣದೀಪ್ ಸಿಂಗ್ ಸುರ್ಜೆವಾಲ ಮಹಿಳೆಯ ಬಗ್ಗೆ ಆಡಿರುವ ಮಾತಿಗೆ ಕಾಂಗ್ರೆಸ್ ನವರು ಸ್ಪಷ್ಟೀಕರಣ ನೀಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಾಂಗ್ರೆಸ್ ನವರು ಅದನ್ನು ತಡೆಯುವ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು.
ಮಾಜಿ ಪ್ರಧಾನಿ ದೇವೇಗೌಡರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ರಾಜ್ಯದಲ್ಲಿ ದೇವೇಗೌಡರಿಗೆ ಬುದ್ಧಿ ಹೇಳುವಷ್ಡು ದೊಡ್ಡವರು ಯಾರೂ ಇಲ್ಲ. ಅವರಿಗೆ ಸಲಹೆ ನೀಡುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ. ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣ ಆಗಲಿದೆ’ ಎಂದು ಬೊಮ್ಮಾಯಿ ಹೇಳಿದರು.