ಹಾವೇರಿ: ಮುಂಬೈಗೆ ಹೋಗಿಬಂದ ಮಾವಿನ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ತಗುಲಿದ ಕಾರಣ ಸೀಲ್ಡೌನ್ ಆಗಿರುವ ಅಂದಲಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕಂಟೋನ್ಮೆಂಟ್ ಹಾಗೂ ಸೀಲ್ಡೌನ್ ಏರಿಯಾದ ಜನರಿಗೆ ಕಲ್ಪಿಸಿರುವ ಮೂಲಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ಮಂಗಳವಾರ ಅಂದಲಗಿ ಗ್ರಾಮದ ಸೀಲ್ಡೌನ್ ಹಾಗೂ ಕಂಟೋನ್ಮೆಂಟ್ ಏರಿಯಾಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಕೋವಿಡ್ ಪ್ರಕರಣ ಅತ್ಯಂತ ಗಂಭೀರವಾದದ್ದು. ಇದನ್ನು ನಿರ್ಲಕ್ಷ್ಯ ಮಾಡಬೇಡಿ. ಎಲ್ಲರೂ ಜಿಲ್ಲಾಡಳಿತದೊಂದಿಗೆ ಸಹಕರಿಸಿ. ನಿಮಗೆ ಬೇಕಾದ ಎಲ್ಲ ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಆಹಾರ ಕಿಟ್, ತರಕಾರಿ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮನೆ ಬಾಗಿಲಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿದ್ದಾರೆ. ಮನೆ– ಮನೆಗೆ ವೈದ್ಯರೇ ಹಾಜರಾಗಿ ನಿಮ್ಮ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಎಲ್ಲರೂ ಸಹಕರಿಸಿ. ಶೀಘ್ರವೇ ಲಾಕ್ಡೌನ್ ಸಡಿಸಲಾಗುವುದು. ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ್ ಪ್ರಕಾಶ ಕುದರಿ ಇದ್ದರು.