ಹಾವೇರಿ: ‘ಇಂದಿನ ಕಾಂಗ್ರೆಸ್ ಪಕ್ಷದಲ್ಲಿರುವ ಯಾವ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು, ಯಾರು ಬ್ರಿಟಿಷರ ಗುಂಡಿಗೆ ಎದೆ ಕೊಟ್ಟಿದ್ದರು ಎಂಬುದರ ಬಗ್ಗೆ ತನಿಖೆಯಾಗಬೇಕಿದೆ. ಹೋರಾಡಿದ ದಾಖಲೆಗಳಿದ್ದರೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಲಿ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ತಿರುಗೇಟು ನೀಡಿದರು.
ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಾವೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಎಂದು ಪದೇ ಪದೇ ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಯಾರೊಬ್ಬರೂ ಭಾಗವಹಿಸಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆಯವರು ಟೀಕಿಸುತ್ತಾರೆ. ಕಾಂಗ್ರೆಸ್ ಈ ಮಾತನ್ನು ಬಿಡಬೇಕು. ಈ ದೇಶದ ಎಲ್ಲ ಜನರು ಜಾತಿ, ಧರ್ಮ ಮೀರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಅಧಿಕಾರದಲ್ಲಿದ್ದಾಗ ಏಕೆ ಜಾರಿಗೊಳಿಸಲಿಲ್ಲ?
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ‘ಜಾತಿ ಗಣತಿ’ ವರದಿಯನ್ನು ತಕ್ಷಣ ಸದನದಲ್ಲಿ ಮಂಡಿಸಿ, ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿ ಕೊಟ್ಟು 9 ವರ್ಷಗಳಾಯಿತು. ಈ ಬಗ್ಗೆ ಸದನದಲ್ಲಿ ಚರ್ಚೆಯನ್ನೇ ನಡೆಸಲಿಲ್ಲ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗ ಏಕೆ ವರದಿಗಳನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಪ್ರಶ್ನಿಸಿದರು.
ಸಿಎಂ ಜತೆ ಮಾತುಕತೆ:ಸದಾಶಿವ ಆಯೋಗದ ವರದಿ ಬಗ್ಗೆ ಸಮುದಾಯ ಮತ್ತು ಸಚಿವರ ಜೊತೆ ಚರ್ಚೆ ನಡೆಸಬೇಕು. ಆ ನಿಟ್ಟಿನಲ್ಲಿ ನಾನು ಕೂಡ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ. ಎಲ್ಲರಿಗೂ ನ್ಯಾಯ ಕಲ್ಪಿಸುವ ರೀತಿಯಲ್ಲಿ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಸಮಗ್ರ ಮೀಸಲಾತಿ ಅವಶ್ಯವಿದೆ:ಒಬಿಸಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗಳು ಕೇಳಿ ಬರುತ್ತಿವೆ. ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಜಾತಿ ಗಣತಿ ನಡೆದಿಲ್ಲ. ಹೀಗಾಗಿ ಮೀಸಲಾತಿ ಬಗ್ಗೆ ಗೊಂದಲವಿದೆ. ಜಾತಿಗಳಿಗೆ ಒಂದೊಂದು ರಾಜ್ಯದಲ್ಲಿ ಒಂದೊಂದು ಸ್ಥಾನವಿದೆ. ಕೇಂದ್ರದಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಇದರ ವರದಿ ಬಂದ ನಂತರ ನಮ್ಮ ತೀರ್ಮಾನ ಪ್ರಕಟಿಸುತ್ತೇವೆ. ದೇಶಕ್ಕೆ ಸಮಗ್ರವಾದ ಮೀಸಲಾತಿ ಅವಶ್ಯವಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.