ಹಾವೇರಿ: ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದಿಂದ ರಾಷ್ಟ್ರೀಯ ಜಲ ಜೀವನ ಮಿಷನ್ ಯೋಜನೆಯ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಪ್ರಗತಿ ಪೂರ್ಣಗೊಂಡಿರುವ ಗ್ರಾಮಗಳ ಯೋಜನೆಯ ನಿರ್ವಹಣೆ, ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಮೇಲ್ವಚಾರಣೆ ಕ್ರಮಗಳ ಕುರಿತು ಪರಿಶೀಲನೆ ನಡೆಸಿತು.
ಕೇಂದ್ರ ತಂಡದ ‘ವಾಟರ್ ಸ್ಯಾನಿಟೈಜೇಷನ್ ಹೈಜಿನ್’ ಅಧಿಕಾರಿಗಳಾದ ಪಿ.ವರಹಪ್ರಸಾದ ಹಾಗೂ ಸಂಜೀವ ಬರಡೋಲಿಯಾ ಅವರು ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಾನಗಲ್ ಹಾಗೂ ರಾಣೆಬೆನ್ನೂರುಗಳ 16 ಗ್ರಾಮಗಳಿಗೆ ಭೇಟಿ ನೀಡಿದ್ದು, ಕೇಂದ್ರ ತಂಡದ ಅಧಿಕಾರಿಗಳು ಈ ಯೋಜನೆಯ ಕಾಮಗಾರಿಗಳ, ಸುಸ್ಥಿರತೆಗೆ ಕೈಗೊಂಡ ಕ್ರಮಗಳ ಕುರಿತು ತೃಪ್ತಿ ವ್ಯಕ್ತಪಡಿಸಿದ್ದಾರೆ.
ಬರುವ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿ ಗ್ರಾಮದ ನೀರು ಮತ್ತು ನೈರ್ಮಲ್ಯತೆಯ ಕುರಿತು ಹಾಗೂ ನೀರಿನ ಗುಣಮಟ್ಟ ಪರೀಕ್ಷೆಯ ಕುರಿತು, ಹೆಚ್ಚಿನ ಜವಾಬ್ದಾರಿಗಳನ್ನು ತೆಗೆದುಕೊಳ್ಳುವದರ ಮೂಲಕ ಪ್ರತಿ ತಿಂಗಳು ಸಭೆಗಳನ್ನು ಏರ್ಪಡಿಸಲು ಸೂಚನೆ ನೀಡಿದ್ದಾರೆ. ಆಗಸ್ಟ್ 21ರಿಂದ ಜಿಲ್ಲೆಗೆ ಭೇಟಿ ನೀಡಿದ ಅವರು, ಆಗಸ್ಟ್ 26ರ ವರೆಗೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಜಲ ಜೀವನ ಮಿಷನ್ ಯೋಜನೆ ಜಿಲ್ಲೆಯಲ್ಲಿ 2019ರಿಂದ ಪ್ರಾರಂಭಗೊಂಡು ಜಿಲ್ಲೆಯ 726 ಜನವಸತಿಗಳ ಪೈಕಿ 410 ಜನ ವಸತಿಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಉಳಿದ 316 ಗ್ರಾಮಗಳಿಗೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2024ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಸುವ ಗುರಿ ಹೊಂದಲಾಗಿದೆ’ ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.