ಹಿರೇಕೆರೂರ (ಹಾವೇರಿ): ಎರಡು ಕೆರೆ ತುಂಬಿಸುವ ಕಾರ್ಯ ಇಂದು ಮಾಡುತ್ತಿದ್ದೇವೆ. ಜಿಲ್ಲೆಯ ಹಲವು ತಾಲ್ಲೂಕಿನಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೂ ಚಾಲನೆ ನೀಡುತ್ತೇವೆ. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಏತ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕುತ್ತಾ ಇದ್ದೇವೆ. ಹಾನಗಲ್, ಬ್ಯಾಡಗಿ ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ ಕೆರೆ ತುಂಬಿಸುವ ಕೆಲಸ ಮುಗಿಯುವ ಹಂತದಲ್ಲಿ ಇವೆ ಎಂದರು.
ನಮ್ಮ ಮಹಾದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕ್ರಿಯೆ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಿದ್ದೇವೆ ಎಂದರು.
ಅಕ್ಟೋಬರ್ 1ರಿಂದ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಮೊದಲು ಜಾರಿ ಮಾಡುತ್ತಿದ್ದೇವೆ. ಈ ಸಂಬಂಧ ಸಮಿತಿ ರಚಿಸಲಾಗಿದೆ ಎಂದರು.
ಆ ಸಮಿತಿಯ ವರದಿ ಆಧಾರದ ಮೇಲೆ ಜಾರಿ ಮಾಡುತ್ತೇವೆ. ಕಳೆದ ಒಂದು ವರ್ಷದಿಂದ ತಯಾರಿ ನಡೆಯುತ್ತಿದೆ. ಎಲ್ಲಾ ಹಂತದ ಗೊಂದಲ, ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
ಪ್ರವಾಸೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ಉದ್ಯೋಗ ಸೃಷ್ಟಿಗೆ ಅವಕಾಶಗಳಿವೆ. ತೆರೆಮರೆಯಲ್ಲಿರುವ ಪ್ರವಾಸಿ ತಾಣಗಳನ್ನು ಬೆಳಕಿಗೆ ತರಲಾಗುವುದು. ಹೀಗಾಗಿ ಉದ್ಯಾಗಾಧಾರಿತ ಪ್ರವಾಸೋದ್ಯಮಕ್ಕೆ ಒತ್ತು ಕೊಡುತ್ತಿದ್ದೇವೆ ಎಂದರು.