ಹಾವೇರಿ: ತಾಲ್ಲೂಕಿನ ಹಿರೇಲಿಂಗದಹಳ್ಳಿಯ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ಬಿಡಬೇಕು ಹಾಗೂ ವಿದ್ಯಾರ್ಥಿಗಳ ಪರೀಕ್ಷೆಯ ಸಮಯಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿ ಎಂ.ಎಸ್. ವಗಣ್ಣನವರಿಗೆ ಮನವಿ ಸಲ್ಲಿಸಲಾಯಿತು.
ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತಾನಾಡಿ, ‘ವಿದ್ಯಾರ್ಥಿಗಳು ಪ್ರತಿದಿನ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಜಿಲ್ಲಾ ಕೇಂದ್ರದ ಕಾಲೇಜುಗಳಿಗೆ ಬರಬೇಕಾಗಿದೆ. ಕೋವಿಡ್ ಕಾರಣದಿಂದ ಗ್ರಾಮೀಣ ಪ್ರದೇಶದ ಸಾರಿಗೆಯನ್ನು ನಿಲ್ಲಿಸಲಾಗಿತ್ತು. ಈಗ ಕಾಲೇಜುಗಳು ಆರಂಭಗೊಂಡಿರುವುದರಿಂದ ಬಸ್ಗಳ ಸಂಚಾರ ಪುನರಾರಂಭಿಸಬೇಕು’ ಎಂದು ಮನವಿ ಮಾಡಿದರು.
ಪದವಿ ಕಾಲೇಜುಗಳನ್ನು ಸರ್ಕಾರ ಪ್ರಾರಂಭಿಸಿ ತರಗತಿ ಹಾಗೂ ಪರೀಕ್ಷೆಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಬಸ್ಗಳ ಕೊರತೆಯಿಂದವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳು ಕೋವಿಡ್ ಮೂರನೇ ಅಲೆಯ ಮುಂಚೆ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿವೆ. ಆದರೆ, ಸಾರಿಗೆ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್ಎಫ್ಐ ಮುಖಂಡರಾದ ಬೀರೇಶ ನೆಟಗಲ್ಲಣ್ಣನವರ ಮಾತಾನಾಡಿ, ನೂರಾರು ವಿದ್ಯಾರ್ಥಿಗಳು ಹಿರೇಲಿಂಗದಹಳ್ಳಿಯಿಂದ ಸುಮಾರು 4 ಕಿ.ಮೀ. ನಡೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ತರಗತಿಗಳಿಗೆ ಬೇಗನೆ ಹೋಗಲು ಸಾಧ್ಯವಾಗುತ್ತಿಲ್ಲ. ಹಾವೇರಿ ನಗರದಿಂದ ಹಿರೇಲಿಂಗದಹಳ್ಳಿ ಗ್ರಾಮಕ್ಕೆ ಬೆಳಿಗ್ಗೆ 8 ಗಂಟೆಗೆ, ಮಧ್ಯಾಹ್ನ 1.30ಕ್ಕೆ ಹಾಗೂ ಸಂಜೆ 5ಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.