ಹಾವೇರಿ: ತಾಲ್ಲೂಕಿನ ಮೇವುಂಡಿ ಮತ್ತು ತೆರದಹಳ್ಳಿ ಗ್ರಾಮಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ಬಿಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ಕೋವಿಡ್-19ನಿಂದ ಗ್ರಾಮೀಣ ಪ್ರದೇಶದ ಸಾರಿಗೆಯನ್ನು ನಿಲ್ಲಿಸಲಾಗಿತ್ತು. ಶಾಲಾ-ಕಾಲೇಜುಗಳನ್ನು ಸರ್ಕಾರ ಪ್ರಾರಂಭಿಸಿ ತರಗತಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಈಗಲಾದರೂ ಸಾರಿಗೆ ಸಂಸ್ಥೆ ಅಧಿಕಾರಿಗಳು ಎಲ್ಲ ಮಾರ್ಗಗಳಿಗೂಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಪ್ರತಿನಿತ್ಯ ಹಾವೇರಿ ಕೇಂದ್ರಕ್ಕೆ ಬರುವ ಸಾವಿರಾರು ವಿದ್ಯಾರ್ಥಿಗಳು, ನೌಕರರು, ಸಾರ್ವಜನಿಕರು ಸರ್ಕಾರಿ ಬಸ್ಗಳಿಲ್ಲದೆ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್ಎಫ್ಐ ಮುಖಂಡರಾದ ಮಹತೇಶ ಪುರದ ಮಾತಾನಾಡಿ, ‘ಹಾವೇರಿ ನಗರದಿಂದ ಮೇವುಂಡಿ ಮತ್ತು ತೆರದಹಳ್ಳಿ ಗ್ರಾಮಕ್ಕೆ ಬೆಳಗ್ಗೆ 6 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಎಂದು ಆಗ್ರಹಿಸಿದರು.