ಹಾವೇರಿ: ‘ಪದವೀಧರರ ಬೇಡಿಕೆ ಈಡೇರಿಸುವಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ವಿಫಲರಾಗುತ್ತಿದ್ದು, ಕ್ಷೇತ್ರದ ಬುದ್ಧಿವಂತ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಈ ಬಾರಿ ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸುವ ವಿಶ್ವಾಸವಿದೆ’ ಎಂದು ಪಕ್ಷೇತರ ಅಭ್ಯರ್ಥಿ ಶಿವಕುಮಾರ ತಳವಾರ ಹೇಳಿದರು.
ಹಾವೇರಿ ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಸದಸ್ಯರ ಚುನಾವಣೆಯ ಮತದಾರರ ಮನೆ–ಮನೆಗಳಿಗೆ ತೆರಳಿ ಪ್ರಚಾರ ಸಂದರ್ಭದಲ್ಲಿ ಅವರು ಪ್ರತಿಕ್ರಿಯಿಸಿದರು.
‘ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ 4 ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಸರ್ಕಾರಿ, ಅರೆ ಸರ್ಕಾರಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಾಗೂ ಐಟಿ– ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮಾತ್ರ ಉದ್ಯೋಗವಕಾಶ ನೀಡುವ ಕಾನೂನು ಮಾಡಲು ಹೋರಾಟ ಮಾಡಲಾಗುವುದು’ ಎಂದರು.