ಹಾವೇರಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಈ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಜ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ರೈತರಿಗೇ ಬೇಡವಾಗಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ದೆಹಲಿಯಲ್ಲಿ ನಿರಂತರವಾಗಿ ರೈತರು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ, 50 ಸಾವಿರಕ್ಕೂ ಹೆಚ್ಚು ರೈತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ’ ಎಂದು ಹೇಳಿದರು.
ಜನವರಿ 25ರಂದು ಜಿಲ್ಲೆಯಿಂದ ಒಂದು ಸಾವಿರ ರೈತರು 25 ಟ್ರಾಕ್ಟರ್ಗಳೊಂದಿಗೆ ಬೆಂಗಳೂರಿಗೆ ಹೋಗಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ರೈತರಿಗೆ ಪುರಸ್ಕಾರ
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಜ.25ರಂದು ಬೆಳಿಗ್ಗೆ 10.30ಕ್ಕೆ ಹಾನಗಲ್ ಪಟ್ಟಣದ ಗುರುಭವನದಲ್ಲಿ ತಾಲ್ಲೂಕು ಮಟ್ಟದ ಸಾಧಕ ರೈತರಿಗೆ ಪುರಸ್ಕಾರ ಮತ್ತು ರೈತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ, ಎಂ.ಎನ್.ನಾಯಕ, ಹಾಲೇಶ ಕೆರೋಡಿ, ರಾಜೇಸಾಬ್ ತರ್ಲಘಟ್ಟ, ಮುತ್ತು ಗುಡಗೇರಿ ಇದ್ದರು.