ಹಾವೇರಿ: ‘ಕೋವಿಡ್ನಂತಹ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಜತೆ ಸಂಪರ್ಕವಿಟ್ಟುಕೊಂಡು ಕಲಿಕೆಗೆ ಯಾವುದೇ ತೊಂದರೆಯಾಗದಂತೆ ನಿರಂತರ ಮಾರ್ಗದರ್ಶನ ಮಾಡಿ’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.
ನಗರದ ಗುರುಭವನದಲ್ಲಿ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ ಪಾಟೀಲ್ ಮಾತನಾಡಿ, ನಿರಂತರ ಕಲಿಕೆಯ ದೂರದೃಷ್ಟಿ ಇಟ್ಟುಕೊಂಡು ವಿದ್ಯಾರ್ಥಿಗಳ ಕನಸಿಗೆ ಯಾವುದೇ ಅಡೆತಡೆಯಾಗದಂತೆ ಕಲಿಕೆಗೆ ಒತ್ತು ನೀಡುವುದು ವಿದ್ಯಾಗಮ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ಸನ್ಮಾನ: ಜಿಲ್ಲೆಯಲ್ಲಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿವಿಧ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶಾಸಕರಾದ ನೆಹರು ಓಲೇಕಾರ ಸನ್ಮಾನಿಸಿದರು.
ನಗರಸಭೆ ಸದಸ್ಯ ಶ್ರೀಕಾಂತ ಪೂಜಾರ, ಬಾಬು ಮೊಮಿನಗಾರ, ಶಿವರಾಜ ಮತ್ತಿಹಳ್ಳಿ, ಎನ್.ಪಿ.ಚಾವಡಿ, ವಕೀಲ ಚೌಡಿ, ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ, ಮುಖ್ಯ ಶಿಕ್ಷಕ ಮೂಲಿಮನಿ, ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.